ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ಕಾರ್ಮಿಕ ಸಮ್ಮಾನ ಪ್ರಶಸ್ತಿ ನೀಡುವ ಸಂಬಂಧ ಜಿಲ್ಲಾ ಮಟ್ಟದ ತ್ರೀಪಕ್ಷಿಯ ನಿರ್ವಹಣಾ ಸಮಿತಿಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಗೃಹ ಕೃತ್ಯದ ಕಾರ್ಮಿಕರು, ಹಮಾಲರು, ದರ್ಜಿಗಳು (ಟೈಲರ್ಸ), ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಮ್ಯಾಕ್ಯಾನಿಕ್ ಗಳು, ಚಿಂದಿ ಆಯುವವರು, ಮೂರು ಚಕ್ರ (ಆಟೋ ಚಾಲಕರು) ಮತ್ತು ನಾಲ್ಕು ಚಕ್ರ ನಡೆಸುವ ಖಾಸಗಿ ವಾಣಿಜ್ಯ ವಾಹನ ಚಾಲಕರು, ಅಗಸರು, ಅಕ್ಕಸಾಲಿಗರು, ಕ್ಷೌರಿಕರು, ಕಮ್ಮಾರರು, ಕುಂಬಾರರು ಹಾಗೂ ಮಂಡಕ್ಕಿ ಭಟ್ಟಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಕಾರ್ಮಿಕ ಸಮ್ಮಾನ ಪ್ರಶಸ್ತಿ ಹಾಗೂ ವಿಶೇಷ ಪುರಸ್ಕಾರಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಫಾರ್ಮ್ ಗಳನ್ನು ತಾಲ್ಲೂಕು ಮಟ್ಟದಲ್ಲಿರುವ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಬೆಳಗಾವಿ ಉದ್ಯಮಭಾಗದಲ್ಲಿರುವ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಗಳಿಂದ ಪಡೆದುಕೊಂಡು, ವಿವರಗಳನ್ನು ಭರ್ತಿ ಮಾಡಿ, ಇತ್ತಿಚಿನ ಪಾಸ್ಪೋರ್ಟ ಅಳತೆಯ ಛಾಯಾಚಿತ್ರ, ಆಧಾರ ಗುರುತಿನ ಚೀಟಿಯ ಪ್ರತಿ, ಮತದಾರರ ಗುರುತಿನ ಚೀಟಿಯ ಪ್ರತಿ, ಬಿ.ಪಿ.ಎಲ್ ಪಡಿತರ ಚೀಟಿಯ ಪ್ರತಿ, ಶೈಕ್ಷಣಿಕ ಮಟ್ಟದ ಪ್ರಮಾಣ ಪತ್ರ, ತಾಂತ್ರಿಕ ನೈಪುಣ್ಯತೆ ಹೊಂದಿದ್ದಲ್ಲಿ ಸಂಬಂಧಿಸಿದ ದಾಖಲೆಗಳು, ವೃತ್ತಿ ಅನುಭವದ ದಾಖಲೆಗಳು, ಜಾತಿ ಪ್ರಮಾಣ ಪತ್ರದ ಪ್ರತಿ, ಅಂಗವಿಕಲರಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು ಎಂದು ಉಪಕಾರ್ಮಿಕ ಆಯುಕ್ತರು ಸಭೆಗೆ ತಿಳಿಸಿದರು.
ಆಯಾ ವರ್ಗಗಳ ಓರ್ವ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ ತಲಾ ರೂ. 1೦,೦೦೦ ನಗದು ಹಾಗೂ ತಲಾ 1೦, ಕಾರ್ಮಿಕರುಗಳಿಗೆ ವಿಶೇಷ ಪುರಸ್ಕಾರ ರೂ. 1೦೦೦ ನಗದು, ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ನೀಡಲಾಗುವುದು, ಫೆ.10ರ ಒಳಗಾಗಿ ತಾಲ್ಲೂಕಾ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಬೆಳಗಾವಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ನಾಗೇಶ ಡಿ.ಜಿ, ಕಾರ್ಮಿಕ ಅಧಿಕಾರಿ ಶ್ರೀಕಾಂತ ಪಾಟೀಲ, ಚೆಂಬರ್ ಆಫ್ ಕಾಮರ್ಸ ಅಧ್ಯಕ್ಷ ಮಹೇಶ ಭಾಗಿ, ಬೆಳಗಾವಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರು, ಗೃಹ ಕೃತ್ಯ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ದಿ, ಸಣ್ಣ ನೀರಾವರಿ, ಲೋಕೋಪಯೋಗಿ, ಕೆಆರ್ಆಯ್ಡಿಎಲ್ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.