Kannada NewsLatest

ಜೈವಿಕ ಇಂಧನ ಮಾದರಿ ಯೋಜನೆ ರೂಪಿಸಲು ಸಚಿವ ಈಶ್ವರಪ್ಪ ಕರೆ

ಜೈವಿಕ ಇಂಧನ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಥೆನಾಲ್ ದರ ನಿಶ್ಚಿತವಿಲ್ಲದೇ ದರ ಏರಿಳಿತ ಕಂಡರೆ ಬಂಡವಾಳ ಹೂಡಿಕೆ ಮಾಡಿರುವ ಕಾರ್ಖಾನೆ ಮಾಲೀಕರಿಗೆ ಆರ್ಥಿಕ ತೊಂದರೆಯಾಗುತ್ತದೆ. ಆದ್ದರಿಂದ ದರ ನಿಗದಿ ಹಾಗೂ ಅವಧಿಯ ಬಗ್ಗೆ ಸ್ಪಷ್ಟತೆ ತರಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ(ಕೆ.ಎಸ್.ಬಿ.ಡಿ.ಬಿ) ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮಿತಿ (ಕೆ.ಎಸ್.ಸಿ.ಎಸ್.ಟಿ) ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜೈವಿಕ ಇಂಧನ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಸೋಮವಾರ (ಜ.೬) ಉದ್ಘಾಟಿಸಿ ಅವರು ಮಾತನಾಡಿದರು.

ಜೈವಿಕ ಇಂಧನ ಉತ್ಪಾದನೆ ಅತ್ಯಗತ್ಯವಾಗಿದ್ದು, ಸ್ಥಳೀಯವಾಗಿ ಉತ್ಪಾದನೆಯಿಂದ ಇಂಧನ ಆಮದು ಪ್ರಮಾಣವನ್ನು ಕಡಿಮೆಗೊಳಿಸಬಹುದು.
ಜೈವಿಕ ಇಂಧನ ಉತ್ಪಾದನೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ-ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ಧವಿದೆ. ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ಸಕ್ಕರೆ ಕಾರ್ಖಾನೆಗಳಿದ್ದು, ಇಥೆನಾಲ್ ಉತ್ಪಾದನೆಯಲ್ಲಿ ತೊಡಗಿವೆ.
ಎಥೆನಾಲ್ ಗೆ ಪ್ರತ್ಯೇಕ ದರ ನಿಗದಿಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಸಚಿವ ಸುರೇಶ್ ಅಂಗಡಿ ಅವರಿಗೆ ಮನವಿ ಮಾಡಿಕೊಂಡರು.
ಎಥೆನಾಲ್ ದರ ನಿಗದಿಪಡಿಸಿದ ಬಳಿಕ ಎಷ್ಟು ವರ್ಷದ ಮಟ್ಟಿಗೆ ದರ ನಿಗದಿಪಡಿಸಲಾಗಿರುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಸಕ್ಕರೆ ಕಾರ್ಖಾನೆಗಳಿಂದ ಎಥೆನಾಲ್ ಉತ್ಪಾದನೆಗೆ ಅನುಕೂಲವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.

ಸಹಾಯಧನ-ಮಾದರಿ ಯೋಜನೆ ರೂಪಿಸಲು ಸಲಹೆ:

ಜೈವಿಕ ಇಂಧನ ಉತ್ಪಾದನೆಗೆ ಸಂಬಂಧಿಸಿದಂತೆ ಯಾವ ರೀತಿಯ ಯೋಜನೆ ರೂಪಿಸಬಹುದು ಎಂಬುದರ ಬಗ್ಗೆ ತಜ್ಞರು ಸ್ಪಷ್ಟ ಅಭಿಪ್ರಾಯ ನೀಡಿದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಯೋಜನೆ ರೂಪಿಸಲು ಸಹಕಾರಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.
ಜಗತ್ತಿನಲ್ಲಿ ಈಗಿರುವ ಇಂಧನ ಸಂಪನ್ಮೂಲ ಗರಿಷ್ಠ ನಲವತ್ತು ವರ್ಷಕ್ಕೆ ಸಾಕಾಗಬಹುದು. ಆದ್ದರಿಂದ ಜೈವಿಕ ಇಂಧನ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ.
ಎರಡು ದಿನಗಳ ಜೈವಿಕ ಇಂಧನ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಹೊರ ಹೊಮ್ಮುವ ನಿರ್ಣಯ ಇಡೀ ದೇಶಕ್ಕೆ ಮಾದರಿಯಾಗಿರಬೇಕು ಎಂದು ಸಚಿವ ಈಶ್ವರಪ್ಪ ಆಶಯ ವ್ಯಕ್ತಪಡಿಸಿದರು.
ಮುಂಬರುವ ಬಜೆಟ್ ನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಯಾವ ರೀತಿ ಸಹಾಯಧನ ನೀಡಬಹುದು ಎಂಬುದರ ಕುರಿತು ಸಮ್ಮೇಳನದಲ್ಲಿ ಸ್ಪಷ್ಟ ಅಭಿಪ್ರಾಯ ರೂಪಿಸಿದರೆ ಅದೇ ಪ್ರಕಾರ ಸರ್ಕಾರ ನೆರವು ನೀಡಲಿದೆ.

ಜೈವಿಕ ಇಂಧನ ಉತ್ಪಾದನೆ ಹೆಚ್ಚಳದಿಂದ ಭವಿಷ್ಯದಲ್ಲಿ ದೇಶಕ್ಕೆ ಬರಬಹುದಾದ ಆಪತ್ತು ತಡೆಗಟ್ಟಲು ಸಹಕಾರಿಯಾಗಲಿದೆ ಎಂದರು.
ಜೈವಿಕ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಕರ್ನಾಟಕವು ಮಾದರಿಯಾಗುವಂತಹ ಯೋಜನೆ ರೂಪಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು, ಜೈವಿಕ ಇಂಧನ, ಸೌರಶಕ್ತಿ, ಪವನಶಕ್ತಿ ಸೇರಿದಂತೆ ವಿವಿಧ ಬಗೆಯ ಕ್ಷೇತ್ರದ ತಜ್ಞರು ಸಮನ್ವಯದಿಂದ ಮಾದರಿ ಯೋಜನೆ ರೂಪಿಸುವುದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ದೇಶದ ಎಲ್ಲ ಮಾರ್ಗಗಳಲ್ಲಿ ಮಾಲಿನ್ಯರಹಿತ ಎಲೆಕ್ಟ್ರಿಕ್ ರೈಲುಗಳನ್ನು ಓಡಿಸುವುದು ಪ್ರಧಾನಮಂತ್ರಿಗಳ ಕನಸಾಗಿದೆ. ಇಂತಹ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಕೈಜೋಡಿಸುವ ಉದ್ಯಮಿಗಳ ಸ್ನೇಹಿ ವಾತಾವರಣ ರೂಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಯೋಜನೆ ರೂಪಿಸುವ ಕೆಲಸವಾಗಬೇಕಿದೆ ಎಂದು ಸಚಿವ ಸುರೇಶ್ ಅಂಗಡಿ ಪ್ರತಿಪಾದಿಸಿದರು.

ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಶಾಸಕರಾದ ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಮಹೇಶ್ ಕುಮಠಳ್ಳಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೆ.ಎಸ್.ಬಿ.ಡಿ.ಬಿ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್ ಶುಕ್ಲಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಜೈವಿಕ ಇಂಧನ ತಜ್ಞರು, ಉದ್ಯಮಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಇದೇ ವೇಳೆ ಜೈವಿಕ ಇಂಧನ ತಜ್ಞರಾದ ವೈ.ಬಿ.ರಾಮಕೃಷ್ಣ ಅವರನ್ನು ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಗಣ್ಯರು ವೇದಿಕೆಯಲ್ಲಿ ಸನ್ಮಾನಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button