Latest

ಬಸ್ತವಾಡದಲ್ಲಿ ಚನ್ನಮ್ಮ, ಶಿವಾಜಿ ಪ್ರತಿಮೆ ಅನಾವರಣ

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿಯ ಸುವರ್ಣ ವಿಧಾನಸೌಧದ ಮಡಿಲಲ್ಲಿ ಇರುವ ಬಸ್ತವಾಡ ಗ್ರಾಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಛತ್ರಪತಿ ಶಿವಾಜಿ ಮಹಾರಾಜ ಮತ್ತು ವೀರರಾಣಿ ಕಿತ್ತೂರು ಚನ್ನಮ್ಮ ಮೂರ್ತಿ ಲೋಕಾರ್ಪಣೆಗೊಳಿಸಿದರು.
ಇಬ್ಬರು ಮಹಾ ಪುರುಷರ ಪ್ರತಿಮೆಗಳನ್ನು ಲೋಕಾಪರ್ಣೆಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ ಮೊಗಲರ ಆಳ್ವಿಕೆ ವಿರುದ್ದ ತೊಡೆ ತಟ್ಟಿ ಆಂಗ್ಲರ ವಿರುದ್ದ ಹೊರಾಡಿ ಹಿಂದೂ ಸಂಸ್ಕೃತಿಯ ರಕ್ಷಣೆ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜ ಮತ್ತು ವೀರರಾಣಿ ಕಿತ್ತೂರು ಚನ್ನಮ್ಮಾ ಹೋರಾಟ, ಶೌರ್ಯ ಮತ್ತು ಈ ಇಬ್ಬರು ಮಹಾಪುರುಷರ ಇತಿಹಾಸ ಎಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದರು.
ಇಂದಿನ ಯುವ ಪೀಳಿಗೆಗೆ ಶಿವಾಜಿ ಮಹಾರಾಜರ ಧೈರ್ಯಬೇಕು. ಅವರಲ್ಲಿರುವ ದೇಶ ಭಕ್ತಿ, ರಾಷ್ಟ್ರಪ್ರೇಮ ರಕ್ತಗತವಾಗಬೇಕು ಎನ್ನುವ ಉದ್ದೇಶದಿಂದ ಮಹಾಪುರುಷರ ಪ್ರತಿಮೆಗಳನ್ನು ಅನಾವರಣಗೊಳಿಸಲಾಗಿದೆ ಎಂದು ಹೇಳಿದರು.
ಸುವರ್ಣ ವಿಧಾನಸೌಧ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿದ್ದು ಕ್ರೀಯಾಶೀಲರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಲ್ಲ ಭಾಷಿಕರನ್ನು, ಎಲ್ಲ ಧರ್ಮಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಭಾಷಾ ಸೌಹಾರ್ದತೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದರು.
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಮತ್ತು ವೀರರಾಣಿ ಕಿತ್ತೂರು ಚನ್ನಮ್ಮ ಅವರು ದೇಶ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಸಾಹಸ ಮತ್ತು ಶೌರ್ಯ ಇಡೀ ದೇಶಕ್ಕೆ ಸ್ಪೂರ್ತಿದಾಯಕವಾಗಿದೆ. ಇಂದಿನ ಯುವಕರು ಅವರ ಇತಿಹಾಸ ತಿಳಿದುಕೊಂಡು ಅವರ ತತ್ವಾದರ್ಶಗಳನ್ನು ತಮ್ಮ ಜೀವದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎರಡು ಬಾರಿ ಸೋತರೂ ಮೂರನೇ ಬಾರಿಗೆ ಗ್ರಾಮೀಣ ಕ್ಷೇತ್ರದ ಮತದಾರರು ಕೈ ಹಿಡಿದಿದ್ದಾರೆ. ಅಭಿವೃದ್ದಿ ಕ್ಷೇತ್ರ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷ ಗ್ರಾಮೀಣ ಕ್ಷೇತ್ರದ ಋಣವನ್ನು ತೀರಿಸುತ್ತದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗ್ರಾಮೀಣ ಕ್ಷೇತ್ರದ ಧ್ವನಿಯಾಗಿ ಸುವರ್ಣ ವಿಧಾನಸೌಧದಲ್ಲಿ ಕ್ಷೇತ್ರದ ಬೇಡಿಕೆಗಳನ್ನು ಮಂಡಿಸುತ್ತಾರೆ. ಅವರ ನಾಯಕತ್ವದಲ್ಲಿ ಕ್ಷೇತ್ರದ ಅಭಿವೃದ್ದಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಯುವರಾಜ ಕದಂ ಮಾತನಾಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಶಿವಾಜಿ ಮಹಾರಾಜರ ಪ್ರತಿಮೆಗಳನ್ನು ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲು ಹಲವಾರು ಕಡೆ ಧನಸಹಾಯ ಮಾಡಿದ್ದಾರೆ. ಈಗಾಗಲೇ ಕ್ಷೇತ್ರದ ಕೆರೆಗಳನ್ನು ತುಂಬಿಸಲು ನೀರಿನ ಸಮಸ್ಯೆಯನ್ನು ಬಗೆ ಹರಿಸಲು ರಸ್ತೆಗಳನ್ನು ಸುಧಾರಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಲವಾರು ಯೋಜನೆಗಳನ್ನು ರೂಪಿಸಿಕೊಂಡು ಆ ಯೋಜನೆಗಳ ಮಂಜೂರಾತಿಗಾಗಿ ಹಗಲಿರುಳು ಶ್ರಮಿಸುತ್ತಿದ್ದು, ಇನ್ನೆರಡು ವರ್ಷದಲ್ಲಿ ಕ್ಷೇತ್ರ ಅಭಿವೃದ್ದಿಯಾಗುವ ಮೂಲಕ ಬದಲಾವಣೆಯಾಗಲಿದೆ ಎಂದರು.
ಶಂಕರಗೌಡ ಪಾಟೀಲ, ಸಿ.ಸಿ.ಪಾಟೀಲ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಅರುಣ ಕಟಾಂಬಳೆ, ಮಲ್ಲೇಶ ಚೌಗಲೆ, ಐಶ್ವರ್ಯ ಸೇರಿದಂತೆ ಬಸ್ತವಾಡ ಗ್ರಾಮಸ್ಥರು ಉಪಸ್ಥಿತರಿದ್ದರು.

Home add -Advt

Related Articles

Back to top button