
ಪ್ರಗತಿವಾಹಿನಿ ಸುದ್ದಿ, ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅವರ ಆಡಳಿತದ ಅವಧಿಯಲ್ಲಿ ರೂಪಿಸಿದ ಹಲವಾರು ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ತಿಳಿಸಬೇಕಾದ ಅಗತ್ಯತೆಯನ್ನು ಯಾವತ್ತಿಗೂ ಮರೆಯಬಾರದು.ಈ ಸೈಕಲ್ ಜಾಥಾ ಕಾರ್ಯಕ್ರಮ ಸತತ 6 ದಿನಗಳ ಕಾಲ ಜರುಗಿದ್ದು, ಪಕ್ಷದ ಸಂಘಟನೆ ಮತ್ತು ಕಾಂಗ್ರೆಸ್ ಸಿದ್ಧಾಂತಗಳ ಮೂಲಕ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಲ್ಲಿ ಯಶಸ್ವಿಯಾಗಿದೆ ಎಂದರು.
ರಾಜ್ಯ ಅಭಿವೃದ್ದಿಯಾಗಬೇಕಾದರೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಎಲ್ಲ ಕ್ಷೇತ್ರಗಳಲ್ಲಿ ಮುಖಂಡರುಗಳು, ಕಾರ್ಯಕರ್ತರು ಸಣ್ಣಪುಟ್ಟ ಮನಸ್ತಾಪಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಚುನಾವಣೆಗಳನ್ನು ಎದುರಿಸಬೇಕಾಗಿದೆ.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಸಿದ್ಧ, ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಇವತ್ತಿನಿಂದಲೇ ನಾವೆಲ್ಲರೂ ಒಗ್ಗಟ್ಟಾಗಿ ಮಾಡಿಕೊಂಡು ಪಕ್ಷದ ಏಳಿಗೆಗಾಗಿ ದಿನದ 24 ಗಂಟೆಗಳ ಕಾಲ ದುಡಿಯುವ ಮುಖಾಂತರ ಬರಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಯದ ಮುನ್ನುಡಿಯನ್ನು ಬರೆಯಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಹಾವೀರ ಮೋಹಿತೆ, ದಸ್ತಗೀರ ಕಾಗವಾಡೆ, ಭೀಮಪ್ಪ ಬದನಿಕಾಯಿ, ಎನ್. ಎಸ್. ಚೌಗುಲಾ, ರೇವಣ್ಣ ಸರವ, ಲಕ್ಷ್ಮಣರಾವ್ ಚಿಂಗಳೆ, ಆರ್. ಎಂ. ಗಸ್ತಿ, ಸದಾಶಿವ ಠಕ್ಕನ್ನವರ ಹಾಗೂ ಪಕ್ಷದ ಕಾರ್ಯಕರ್ತರು, ಹಲವಾರು ಮಹಿಳೆಯರು ಉಪಸ್ಥಿತರಿದ್ದರು.
NDA ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆ