ಕೊರೊನಾ ಭೀತಿ: ಬಯೋ ವೆಸ್ಟ್ ಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕ್ವಾರಂಟೈನ್ ಆಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸೇರಿದಂತೆ ಹಲವು ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಸೂಚಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಾದ ಮೈಸೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಬೆಳಗಾವಿ, ತುಮಕೂರು, ವಿಜಯಪುರ (ಬಿಜಾಪುರ), ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಕಲಬುರಗಿ ನಗರಗಳ ಆಯುಕ್ತರೂಂದಿಗೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಚರ್ಚೆ ನಡೆಸಿದ್ದು, ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವೈರಸ್ ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಅದರ ಜಾರಿ ಯಾವ ರೀತಿ ಇದೆ ಎಂದು ಮಾಹಿತಿ ಪಡೆದರು.

ನಗರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳ ಖರೀದಿಸಲು ಬೇಕಾದ ಕ್ರಮಗಳ ಬಗ್ಗೆ, ಮಾರುಕಟ್ಟೆ ಸ್ಥಳಾಂತರ, ಪೌರ ಕಾರ್ಮಿಕ ವರ್ಗದವರ ಆರೋಗ್ಯದ ಮೇಲೆ ನಿಗಾ ವಹಿಸುವ ಮೂಲಕ ಅವರಿಗೆ ಕಾಲಕ್ಕೆ ತಪಾಸಣೆ ಮಾಡಿ ಎಂದು ಸೂಚಿಸಿದರು.

ಎಲ್ಲಾ ಮಹಾನಗರ ಪಾಲಿಕೆ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ಅಭಾದಿತ. ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ಕೊರತೆ ಅಗಬಾರದು ಎಂದು ಪಾಲಿಕೆ ಆಯುಕ್ತರಿಗೆ ನಿರ್ದೇಶಿದರು. ಮಹಾನಗರ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ತಗುಲುವುದನ್ನು ತಡೆಗಟ್ಟದರೆ, ಅದು ಇತರೆ ಪ್ರದೇಶಗಳಿಗೆ ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಅದಕ್ಕೆ ಕ್ವಾರಂಟೈನ್ ಆಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸೇರಿದಂತೆ ಹಲವು ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರು ಸೂಚಿಸಿದ್ದಾರೆ. ಈ ರೀತಿಯ ವಿಲೇವಾರಿಗೆ ಅರೋಗ್ಯ ಇಲಾಖೆ ಸಹಾಯ ಪಡೆಯಲು ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಯೋಮೆಡಿಕಲ್ ವೆಸ್ಟ್ ಅನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿದ್ದು, ಇದನ್ನು ಇತರೆ ಪಾಲಿಕೆಗಳು ಅನುಸರಿಸಬೇಕು ಎಂದು ಸೂಚನೆ ನೀಡಿದರು. ಹತ್ತು ಮಹಾನಗರ ಪಾಲಿಕೆಗಳು ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕೆಲಸ ಮಾಡಲು ಸೂಚನೆ ನೀಡಿದರು. ಪ್ರತಿ ದಿನ ಪಾಲಿಕೆಗಳು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ತಮಗೆ ನೀಡಬೇಕು ಎಂದು ಸಚಿವರು ಸೂಚಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button