ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಪ್ರತಿ ಮನೆಗೂ ಸಿಸಿಟಿವಿ ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸುವಂತೆ ಉದ್ಯಮಬಾಗ ಪೊಲೀಸ್ ಠಾಣೆಯ ಸಿಪಿಐ ಎಸ್.ಸಿ.ಪಾಟೀಲ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಈ ಕುರಿತು ಉದ್ಯಮಬಾಗ ಠಾಣೆಯ ವ್ಯಾಪ್ತಿಯಲ್ಲಿ ನಿರಂತರವಾಗಿ ತಿಳಿವಳಿಕೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಅವರು, ಸುರಕ್ಷತೆಯ ದೃಷ್ಟಿಯಿಂದ ಎಲ್ಲರೂ ಕ್ಯಾಮೆರಾ ಅಳವಡಿಸಲು ಮುಂದಾಗಬೇಕು. ಅಪರಾಧ ನಡೆದ ನಂತರ ಪಶ್ಚಾತಾಪ ಪಡುವುದಕ್ಕಿಂತ ಮೊದಲು ಎಚ್ಚರಿಕೆ ವಹಿಸುವುದು ಉತ್ತಮ ಎಂದರು.
ರಾಣಿ ಚನ್ನಮ್ಮ ನಗರದಲ್ಲಿ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮ ನಡೆಸಿದ ಅವರು, ಠಾಣೆಗೆ ಬೇರೆ ಬೇರೆ ಕೆಲಸಗಳಿಗೆ ಬರುವ ಸಾರ್ವಜನಿಕರನ್ನು ಕೂಡ್ರಿಸಿಕೊಂಡು ತಿಳಿವಳಿಕೆ ನೀಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕಳ್ಳತನ, ಕೊಲೆ, ಸುಲಿಗೆಯಂತಹ ಪ್ರಕರಣಗಳು ಎಲ್ಲ ಕಡೆ ಹೆಚ್ಚಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.
ಪ್ರಗತಿವಾಹಿನಿಯೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರು ಹೇಳಿದ ತಕ್ಷಣ ತಿಳಿದುಕೊಂಡು ಕ್ಯಾಮೆರಾ ಅಳವಡಿಸಲು ಮುಂದಾಗುತ್ತಿದ್ದಾರೆ. ಆದರೆ ಶ್ರೀಮಂತರು, ವಿದ್ಯಾವಂತರೇ ತಿಳಿದುಕೊಳ್ಳುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಸಿಸಿಟಿವಿ ಕ್ಯಾಮೆರಾ ಮಾರಾಟಗಾರರನ್ನು ಕರೆಸಿ, ಅತ್ಯಂತ ಕಡಿಮೆ ದರದಲ್ಲಿ ಕ್ಯಾಮೆರಾ ಒದಗಿಸುವಂತೆ ಮತ್ತು ಅವರೇ ಬಂದು ಅಳವಡಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದು ಆದಷ್ಟು ಶೀಘ್ರ ಕ್ಯಾಮೆರಾ ಕೂಡ್ರಿಸಬೇಕು. ಯಾವುದೇ ಮಾಹಿತಿ ಬೇಕಿದ್ದರೆ ಉದ್ಯಮಬಾಗ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರೊಂದಿಗೆ ಹಾಗೂ ಇತರ ಗ್ರುಪ್ ಗಳಿಗೆ ಶೇರ್ ಮಾಡಿ)