ಪ್ರಗತಿವಾಹಿನಿ ಸುದ್ದಿ, ಗೋಕಾಕ:
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಕೈಬಲ ಪಡಿಸಲು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಬೆಳಗಾವಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ರವಿವಾರದಂದು ಅರಬಾವಿ ವಿಧಾನ ಸಭಾ ಮತಕ್ಷೇತ್ರದ ಮೆಳವಂಕಿ, ಕೌಜಲಗಿ, ವಡೇರಹಟ್ಟಿ ಹಾಗೂ ಯಾದವಾಡ ಜಿ.ಪಂ ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ೩ ಅವಧಿಯಲ್ಲಿ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಸಾಕಷ್ಟು ಅಭಿವೃದ್ದಿ ಪರ ಕಾರ್ಯಗಳನ್ನು ಮಾಡಿದ್ದಾರೆ. ಹಿಂದಿನ ಚುನಾವಣೆಯಲ್ಲಿ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಎಪ್ರೀಲ್-೨೩ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ಕೋರಿದರು.
ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಜವಾಬ್ದಾರಿ ನಮ್ಮ ಕಾರ್ಯಕರ್ತರದ್ದಾಗಿದೆ. ಅರಬಾವಿ ಮತಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ತಿಳಿಸಿದರು.
ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಮಾದರ, ಎನ್ಎಸ್ಎಫ್ ಅತಿಥಿ ಗೃಹದ ಲಕ್ಕಪ್ಪ ಲೋಕುರಿ, ಶಕೀಲ ಧಾರವಾಡಕರ, ಜಿ.ಪಂ, ತಾ.ಪಂ, ಗ್ರಾ.ಪಂ, ಸದಸ್ಯರುಗಳು, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿ ಕೇಂದ್ರಗಳ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಎಲ್ಲ ಗ್ರುಪ್ ಗಳಿಗೆ ಶೇರ್ ಮಾಡಿ)