Kannada NewsKarnataka NewsLatestPolitics

*ಸಮೃದ್ಧ ಕರ್ನಾಟಕಕ್ಕೆ ಪೂರಕ ಬಜೆಟ್‌: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 4.48 ಲಕ್ಷ ಕೋಟಿ ರೂ. ಮೊತ್ತದ ಈ ಬೃಹತ್ ಆಯವ್ಯಯವು “ಸಮೃದ್ಧ ಕರ್ನಾಟಕ” ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.

Home add -Advt

2026-27 ಸಾಲಿನ ಬಜೆಟ್‌ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇದಕ್ಕಾಗಿ ಸುಮಾರು ₹52,000 ಕೋಟಿಗೂ ಅಧಿಕ ಹಣ ಮೀಸಲಿಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಅನುದಾನ ನೀಡಲಾಗಿದೆ. ರಾಜ್ಯದ 800 ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳನ್ನಾಗಿ ಮೇಲ್ದರ್ಜೆಗೇರಿಸಲು ₹3,900 ಕೋಟಿ ಮೀಸಲಿಡಲಾಗಿದೆ. ಅಲ್ಲದೆ, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೊಸ ‘ಲೇಬರ್ ರೆಸಿಡೆನ್ಶಿಯಲ್ ಸ್ಕೂಲ್’ಗಳನ್ನು ಘೋಷಿಸಲಾಗಿದೆ ಎಂದಿದ್ದಾರೆ.

ತಾಯಿ-ಮಗು ಮರಣ ಪ್ರಮಾಣ ತಗ್ಗಿಸಲು ವಿಶೇಷ ಒತ್ತು ನೀಡಲಾಗಿದ್ದು, ರಾಜ್ಯಾದ್ಯಂತ ಡಿಜಿಟಲ್ ಹೆಲ್ತ್ ಕಾರ್ಡ್ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಯುಪಿಐ (UPI) ಪಾವತಿ ಸೌಲಭ್ಯವನ್ನು ಪರಿಚಯಿಸಲಾಗುತ್ತಿದೆ. 38 ಲಕ್ಷ ರೈತರಿಗೆ ₹30,000 ಕೋಟಿ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮಹತ್ವದ ಘೋಷಣೆ ಮಾಡಲಾಗಿದೆ. ಕೃಷಿ ಮಾಹಿತಿಗಾಗಿ ಎಐ (AI) ಆಧಾರಿತ ರೈತ ಕಾಲ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ಬೆಂಗಳೂರನ್ನು ವಿಶ್ವದ ಅತ್ಯಂತ ವಾಸಯೋಗ್ಯ ನಗರವನ್ನಾಗಿ ಮಾಡಲು ಆದ್ಯತೆ ನೀಡಲಾಗಿದೆ. ಮೆಟ್ರೋ ಜಾಲದ ವಿಸ್ತರಣೆ ಮತ್ತು ನಗರದ 450 ಕಿ.ಮೀ ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ₹3,000 ಕೋಟಿ ನಿಗದಿಪಡಿಸಲಾಗಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ (Social Media) ಬಳಕೆಯನ್ನು ನಿರ್ಬಂಧಿಸುವ ಪ್ರಸ್ತಾಪ ಮತ್ತು ಶಾಲಾ-ಕಾಲೇಜುಗಳಲ್ಲಿ ಕಿರುಕುಳ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರಲು ನಿರ್ಧರಿಸಲಾಗಿದೆ. ಒಟ್ಟಾರೆ ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಗಾಂಧೀಜಿಯವರ ‘ಅಂತ್ಯೋದಯ’ ತತ್ವವೇ ಸಿಎಂ ಅವರು ಮಂಡಿಸಿದ ಬಜೆಟ್‌ನ ಅಡಿಪಾಯವಾಗಿದೆ ಎಂದು ಬಜೆಟ್‌ ಕುರಿತು ಸಚಿವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Related Articles

Back to top button