ಪ್ರಗತಿವಾಹಿನಿ ಸುದ್ದಿ: ಸಂಬಂಧಿಕರ ಮನೆಗೆ ಬಂದಿದ್ದಾಗ ಘೋರ ದುರಂತ ಸಂಭವಿಸಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ದಾರುಭ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. 2 ವರ್ಷದ ದೀಕ್ಷಿತ್ ಮೃತ ಮಗು. ಮಗು ಕೆಳಗೆ ಬಿದ್ದ ಹೊಡೆತಕ್ಕೆ ಕೋಮಾಗೆ ಜಾರಿದ್ದು, 24 ಗಂಟೆಗಳ ಕಾಲ ಕೋಮಾದಲ್ಲಿದ್ದ ದೀಕ್ಷಿತ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಸರಹಳ್ಳಿಯ ನವೀನ್ ಕುಮಾರ್, ಕಾವ್ಯ ದಂಪತಿ ಮತ್ತು ಮಗು ದೀಕ್ಷಿತ್ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಈ ದುರಂತ ಸಂಭವಿಸಿದೆ.



