Kannada NewsKarnataka NewsLatestPolitics
*ಹೊಸದಾಗಿ 21 ತಾಲೂಕುಗಳು ಬರ ಪೀಡಿತ ಎಂದು ಘೋಷಿಸಲು ಸಂಪುಟ ಸಮ್ಮತಿ*

ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಹೊಸದಾಗಿ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಎಂದು ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರ ಪೀಡಿತ ಎಂದು ಈಗಾಗಲೇ ಘೋಷಿಸಲಾಗಿತ್ತು. ಇದರ ಜೊತೆಗೆ ಈಗ ಮತ್ತೆ 21 ತಾಲೂಕುಗಳನ್ನು ಹೊಸದಾಗಿ ಬರ ಪೀಡಿತ ಎಂದು ಘೋಷಿಸಲು ಸಂಪುಟ ಸಮ್ಮತಿ ನೀಡಿದೆ ಎಂದರು.
ಇನ್ನು 2008-09ರಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಕಾನೂನು ಜಾರಿ ಮಾಡಲಾಗಿತ್ತು. ಅದರಂತೆ ಈಗ ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ದೊರೆತಿದೆ ಎಂದು ಹೇಳಿದರು.




