
ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಘೋಷಿಸಿದರು.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ ಎಂದರು.
ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಟವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ. ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ, ಮಗುವನ್ನು ಸಮಾಜದ ಆಸ್ತಿಯಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ. ಮಗು ನಾಳೆಯ ಉತ್ತಮ ಪ್ರಜೆಯಾಗಬೇಕು, ಸಮಾಜಕ್ಕೆ ಆಸ್ತಿಯಾಗಬೇಕು ಎಂದು ಸಚಿವರು ಕರೆ ನೀಡಿದರು.
ಸೀಮಂತದ ಮೌಲ್ಯ ವಿವರಿಸಿದ ಸಚಿವರು…
ತಾಯ್ತನದ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ, ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ನಿಭಾಯಿಸಿ, ಮಗುವಿಗೆ ಉತ್ತಮ ಸಂಸ್ಕಾರ ಕೊಟ್ಟು, ಬೆಳೆಸಿ ಎನ್ನುವುದನ್ನು ಹೇಳುವುದಕ್ಕಾಗಿ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮಹಾಭಾರತದಲ್ಲಿ ಸೌಭದ್ರೆ ಗರ್ಭವತಿಯಾದಾಗ ಶ್ರೀಕೃಷ್ಣ ತನ್ನ ತಂಗಿಯನ್ನು ನೋಡಲು ಬರುತ್ತಾನೆ. ತಂಗಿಗೆ ಚಕ್ರವ್ಯೂಹದೊಳಗೆ ನುಗ್ಗುವುದು ಹೇಗೆ ಎನ್ನುವ ಕಥೆ ಹೇಳಲು ಆರಂಭಿಸುತ್ತಾನೆ. ಆದರೆ ಕಥೆ ಕೇಳುತ್ತಾ ಸೌಭದ್ರೆ ನಿದ್ರೆಗೆ ಜಾರುತ್ತಾಳೆ. ಆಗ ಗರ್ಭದೊಳಗಿದ್ದ ಮಗು ಕಥೆ ಕೇಳುತ್ತ ಪ್ರತಿಕ್ರಿಯಸಲು ಆರಂಭಿಸುತ್ತದೆ. ಆಗ ಶ್ರೀಕೃಷ್ಣನಿಗೆ ಗೊತ್ತಾಗುತ್ತದೆ, ತನ್ನ ತಂಗಿಯ ಗರ್ಭದಲ್ಲಿರುವುದು ಸಾಮಾನ್ಯ ಮಗುವಲ್ಲ ಎಂದು. ಆಗಲೇ ಗರ್ಭದಲ್ಲಿರುವಾಗಲೇ ಅಭಿಮನ್ಯು ಶ್ರೀ ಕೃಷ್ಣ ಹೇಳಿದ ಕಥೆ ಕೇಳುತ್ತ ಚಕ್ರವ್ಯೂಹ ಭೇದಿಸುವಂತಹ ದೊಡ್ಡ ಯುದ್ಧ ವಿದ್ಯೆಯನ್ನು ಕಲಿತಿದ್ದ… ಹಾಗಾಗಿ, ಗರ್ಭಿಣಿಯಾಗಿದ್ದಾಗ ದೃಶ್ಯ ಮತ್ತು ಶ್ರವ್ಯ ಎರಡೂ ಉತ್ತಮವಾಗಿರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗರ್ಭಿಣಿಯರೊಂದಿಗೆ ಊಟ ಮಾಡಿದ ಸಚಿವರು
ಕಾರ್ಯಕ್ರಮದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗರ್ಭಿಣಿಯರಿಗೆ ಹೋಳಿಗೆ ಊಟ ಬಡಿಸಿದರು. ಬಳಿಕ ಅವರೊಂದಿಗೆ ಊಟ ಮಾಡುವ ಮೂಲಕ ಗಮನಸೆಳೆದರು. ಗರ್ಭಿಣಿಯರ ಜೊತೆ ಸೆಲ್ಫಿಗೂ ಫೋಸ್ ಕೊಟ್ಟರು.
ಈ ವೇಳೆ ಸಚಿವರಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಸಾಥ್ ನೀಡಿದರು.