
ಪ್ರಗತಿವಾಹಿನಿ ಸುದ್ದಿ: ಪಹಲ್ಲಾಮ್ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಗುರುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳು ಪಕ್ಷ ಭೇದ ಮೀರಿ ಒಗ್ಗಟ್ಟು ಪ್ರದರ್ಶಿಸಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ನಿಲ್ಲುವುದಾಗಿ ಪ್ರತಿಜ್ಞೆ ಮಾಡಿವೆ.
ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಕ್ರಮ ಕೈಗೊಳ್ಳುತ್ತೇವೆ ಎಂಬುದು ಘಟನೆಯ ಕುರಿತು ಚರ್ಚೆಯ ಸಂದರ್ಭದಲ್ಲಿ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರು ವ್ಯಕ್ತಪಡಿಸಿದ ಭಾವನೆಯಾಗಿದೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭದ್ರತಾ ಲೋಪ ಮತ್ತು ಗುಪ್ತಚರ ಇಲಾಖೆಯ ಕೆಲವು ಲೋಪಗಳನ್ನು ಒಪ್ಪಿಕೊಂಡರು. ಆದರೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಏಕತೆಯನ್ನು ಪ್ರದರ್ಶಿಸುವ ಮೂಲಕ ಇತರ ಪಕ್ಷಗಳ ನಾಯಕರೊಂದಿಗೆ ಎಲ್ಲಾ ಸಂಬಂಧಿತ ವಿವರಗಳನ್ನು ಹಂಚಿಕೊಂಡರು ಎಂದು ಮೂಲಗಳು ತಿಳಿಸಿವೆ.