ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ 8 ಲೋಕಸಭಾ ಕ್ಷೇತ್ರಗಳ ಮತಯಂತ್ರದಿಂದ ಕಾಂಗ್ರೆಸ್ ಪಕ್ಷದ ಚಿಹ್ನೆ ಮಾಯವಾಗಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಈ ಕ್ಷೇತ್ರಗಳಲ್ಲಿ ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ಥಿತ್ವ ಕಳೆದುಕೊಂಡಂತಾಗಿದೆ.
ಇದು ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಎಂದು ಬಿಜೆಪಿ ಲೇವಡಿ ಮಾಡಿದೆ.
ಕಾಂಗ್ರೆಸ್ 20, ಜೆಡಿಎಸ್ 8 ಸೀಟ್ ಫೈನಲ್
ಮಂಡ್ಯ, ಹಾಸನ, ವಿಜಯಪುರ, ತುಮಕೂರು, ಉತ್ತರ ಕನ್ನಡ, ಬೆಂಗಳೂರು ಉತ್ತರ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ತುಮಕೂರು ಕಾಂಗ್ರೆಸ್ ಹಾಲಿ ಸಂಸದರಿರುವ ಕ್ಷೇತ್ರ. ಉತ್ತರ ಕನ್ನಡವೂ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರವೇ.
ಈಗ ಈ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಲಸವೇ ಇಲ್ಲ. ಜೆಡಿಎಸ್ ಪರವಾಗಿ ಉತ್ಸಾಹದಿಂದ ಕೆಲಸ ಮಾಡುವ ಸಾಧ್ಯತೆ ಕಡಿಮೆ. ಅನೇಕ ಕಡೆ ಈವರೆಗೂ ಜೆಡಿಸ್ ನ್ನು ವಿರೋಧ ಮಾಡಿಕೊಂಡು ಬಂದಿರುವ ಕಾಂಗ್ರೆಸ್ ಕಾರ್ಯಕರ್ತರು ಈಗ ಒಮ್ಮೆಲೆ ಜೆಡಿಎಸ್ ಪರವಾಗಿ ಕೆಲಸ ಮಾಡುವುದು ಕಷ್ಟ. ಹಾಗಾಗಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ತನ್ನ ಬಲವನ್ನು ಕಳೆದುಕೊಳ್ಳುವ ಆತಂಕ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ.
ಕಾಂಗ್ರೆಸ್ ತನ್ನ ಅಭ್ಯರ್ಥಿ ಪರ ಕೆಲಸ ಮಾಡದಿದ್ದರೆ ಕಾಂಗ್ರೆಸ್ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ತಾನೂ ಕೆಲಸ ಮಾಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಜೆಡಿಎಸ್ ರವಾನಿಸಿದೆ. ಇದರಿಂದಾಗಿ ಬಹುತೇಕ ಕ್ಷೇತ್ರಗಳಲ್ಲಿ ದೊಸ್ತಿ ಪಕ್ಷಗಳೇ ಪರಸ್ಪರ ಗೆಲುವಿಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.
ಈ ಬೆಳವಣಿಗೆಯನ್ನು ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ, ಕಾಂಗ್ರೆಸ್ ಮುಕ್ತ ಕರ್ನಾಟಕ್ಕೆ ಮುನ್ನುಡಿ ಎಂದು ಬಿಜೆಪಿ ವಿಶ್ಲೇಷಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾಲು ಎಳೆಯುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರು.
ಏನೇ ಆದರೂ ರಾಷ್ಟ್ರೀಯ ಪಕ್ಷವೊಂದು 8 ಕ್ಷೇತ್ರಗಳಲ್ಲಿ ತನ್ನ ಚಿಹ್ನೆಯನ್ನೇ ಕಳೆದುಕೊಂಡಿರುವುದು ವಿಪರ್ಯಾಸವೇ ಸರಿ.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಎಲ್ಲ ಪರಿಚಿತರಿಗೆ, ನಿಮ್ಮ ಎಲ್ಲ ಗ್ರುಪ್ ಗಳಿಗೆ ಶೇರ್ ಮಾಡಿ)