Karnataka NewsPolitics

*ರಾಜ್ಯಕ್ಕೆ ಕಳೆದ 5 ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ*

ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಮಾಹಿತಿ

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ , ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button