*ಕಾಂಗ್ರೆಸ್ ಗೆ ಮತ್ತೊಂದು ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ವೈ.ಎಸ್.ವಿ ದತ್ತಾ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವೈ.ಎಸ್.ವಿ ದತ್ತಾ ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು.
ಚಿಕ್ಕಮಗಳೂರಿನ ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿ ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿದ ವೈ.ಎಸ್.ವಿದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಭರವಸೆ ನಿಡಿದ್ದರು. ಆದರೆ ಟಿಕೆಟ್ ಕೈತಪ್ಪಿದೆ. ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದಷ್ಟೇ ಬಾಕಿಯಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಭಿಮಾನಿಗಳು ಹೇಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ವಿರುದ್ಧ ಪಕ್ಷೇತರ ಅಭ್ಯಾರ್ಥಿಯಾಗಿ ಟವೆಲ್ ಗುರುತಿನಿಂದ ಸ್ಪರ್ಧಿಸುತ್ತೇನೆ ಎಂದರು.
ಇದೇ ವೇಳೆ ಚುನಾವಣೆ ಖರ್ಚಿಗಾಗಿ ಟವೆಲ್ ಹಾಕಿ ಹಣ ಸಂಗ್ರಹಿಸಿದ ವೈ ಎಸ್ ವಿ ದತ್ತಾ, ಹಣ ಬಲ, ಜಾತಿ ಮೇಲೆ ಕಾಂಗ್ರೆಸ್ ನಲ್ಲಿ ಟಿಕೆಟ್ ನೀಡುತ್ತಿದ್ದಾರೆ. ಇವೆರಡೂ ನನಗಿಲ್ಲ. ಮೈ ತುಂಬಾ ಸಾಲ ಮಾಡಿದವನು ನಾನು. ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿದ್ದಕ್ಕೆ ಕಡೂರು ಬಿಜೆಪಿ ಕಚೇರಿಮುಂದೆ ಸಂಭ್ರಮಾಚರಣೆ ಮಾಡಿದ್ದಾರೆ. ಇದೆಲ್ಲವನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದರು.