LatestUncategorized

*ಕೇಂದ್ರ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

Home add -Advt

ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.


Related Articles

Back to top button