Kannada NewsKarnataka NewsLatest
ಕಲುಷಿತ ನೀರು ಕುಡಿದು 80ಕ್ಕೂ ಹೆಚ್ಚು ಜನ ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ, ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
ಈ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣಗೊಂಡಿದ್ದರಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿದ ಘಟನೆ ಬೆನ್ನಿಗೇ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ನೀರು ಸೇವಿಸಿ ಅಸ್ವಸ್ಥರಾದ ಅನೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಷ್ಟು ಜನ ಮನೆಯಲ್ಲೇ ಮಲಗಿ ಸಂಕಟ ಅನುಭವಿಸುತ್ತಿದ್ದಾರೆ.
ಚಿತ್ತಾಪುರ ಗ್ರಾಮ ಪಂಚಾಯಿತಿಯವರು ಗ್ರಾಮದ ಸ್ವಚ್ಛತೆ ವಿಷಯದಲ್ಲಿ ತೋರಿದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದಿಂದ ಸಮಸ್ಯೆ ಉಂಟಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿಷಯ ತಿಳಿದು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸುತ್ತಿದ್ದಾರೆ.




