Kannada NewsKarnataka NewsLatest
ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ ಗಳನ್ನು ಸರ್ಕಾರ ಮಂಜೂರು ಮಾಡಿ 74 ಕೊಟಿ ರೂಗಳನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ ರೂ 75 ಕೋಟಿ ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದಕ್ಕಾಗಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಮರ್ಪಿಸಿದ್ದು ನಮ್ಮ ಸರ್ಕಾರ ರೈತರ ನೆರವಿಗೆ ಸದಾ ಇರಲಿದೆ ಎಂದು ತಿಳಿಸಿದ್ದಾರೆ.




