Kannada NewsKarnataka NewsLatest
*ಊರಿಗೆ ಬಂದಿದ್ದ ಡಿಆರ್ ಡಿಒ ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಡಿಆರ್ ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
24 ವರ್ಷದ ಭರತ್ ಕಲ್ಲರ್ಪೆ ಆತ್ಮಹತ್ಯೆ ಮಾಡಿಕೊಂಡಿರುವ ವಿಜ್ಞಾನಿ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್, ಹೈದರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದರು. ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ವಾರದ ಹಿಂದಷ್ಟೇ ಊರಿಗೆ ಬಂದಿದ್ದ ಭರತ್ ಸಂಸ್ಥೆಗೆ ರಾಜೀನಾಮೆ ಪತ್ರ ರವಾನಿಸಿದ್ದರು. ಆದರೆ ಸಂಸ್ಥೆ ರಾಜೀನಾಮೆ ಸ್ವೀಕರಿಸಿರಲಿಲ್ಲ. ನಿನ್ನೆ ರಾತ್ರಿ ಹೈದರಾಬಾದ್ ಕಚೇರಿಯಿಂದ ಭರತ್ ಗೆ ಕರೆ ಬಂದಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಭರತ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




