Belagavi NewsBelgaum NewsKannada NewsKarnataka NewsNationalPolitics

*ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಚನ್ನರಾಜ ಹಟ್ಟಿಹೊಳಿ* 

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆ ಎಂದು  ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ವಾಗ್ದಾಳಿ ನಡೆಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಳಗಾವಿ ಗ್ರಾಮೀಣ, ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು ನಗರದ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ರಾಜ್ಯಪಾಲರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ ವಿರುದ್ಧ ಶಡ್ಯಂತ್ರ ಮಾಡಲಾಗಿದೆ. ಸಿಎಂ ವಿರುದ್ಧ ಸುಳ್ಳು ಆರೋಪ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಪ್ರತಿಭಟನೆ ನಡೆಸಿದ ನಡೆಸಿ ಕೈ ಕಾರ್ಯಕರ್ತರು ರಾಜ್ಯಪಾಲರು, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶಗೊಂಡರು. ಅಲ್ಲದೆ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಗೆಲುವಾಗಲಿದ್ದು, ರಾಜ್ಯಪಾಲರಿಗೆ ಮುಖಭಂಗ ನಿಶ್ಚಿತ ಎಂದು ಘೋಷಣೆ ಮೊಳಗಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಯಾವುದೇ ಗುರುತರವಾದ ಆರೋಪಗಳು ಇಲ್ಲದಿದ್ದರು ಸಹ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಅವರ ವಿರುದ್ಧ ಪ್ರಕರಣ ದಾಖಲಿಸಲು ಪೂರ್ವಾನುಮತಿ ನೀಡಿರುವುದು ಖಂಡನೀಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಹಿಂದುಳಿದ ವರ್ಗದವರು ಎಂಬ ಏಕೈಕ ಕಾರಣಕ್ಕೆ ಅವರ ವಿರುದ್ದ ಇಲ್ಲ ಸಲ್ಲದ ಆರೋಪಗಳನ್ನು ಪ್ರತಿಪಕ್ಷಗಳು ಮಾಡುತ್ತಿವೆ. ಬಿಜೆಪಿ ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು. ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರಗಳಿಗೆ ನಿರಂತರ ತೊಂದರೆ ನೀಡುವ ಪರಿಪಾಠವನ್ನು ಬೆಳೆಸಿಕೊಂಡಿವೆ. ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗಿದ್ದಾರೆ ಎಂದು ಆರೋಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button