ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಇನ್ನೂ 10 ದಿನಗಳವರೆಗೆ ಅಂದರೆ ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಈ ಹಿಂದೆ ವಿಧಿಸಿದ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಡಿ.ಕೆ.ಶಿವಕುಮಾರ ಪರ ವಕೀಲರು ಜಾಮೀನು ನೀಡುವಂತೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯ, ಇನ್ನೂ ವಿಚಾರಣೆ ಪ್ರಾಥಮಿಕ ಹಂತದಲ್ಲೇ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದು ಸರಿಯಲ್ಲ ಎಂದು ವಾದ ಮಂಡಿಸಿತು.
ಈ ಹಿನ್ನೆಲೆಯಲ್ಲಿ ನ್ಯಾಯಾಲದ ನ್ಯಾಯಾಂಗ ಬಂಧನವನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿದೆ. ಇದರಿಂದಾಗಿ ಸತತ ಮೂರನೇ ಬಾರಿಗೆ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ.
ಈ ಮಧ್ಯೆ, ಡಿ.ಕೆ.ಶಿವಕುಮಾರ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ. ಇದರಿಂದಾಗಿ ಕುಟುಂಬದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದಂತಾಗಲಿದೆ.
ಸೆಪ್ಟಂಬರ್ 3ರಂದು ಜಾರಿ ನಿರ್ದೇಶನಲಾಯ ಡಿ.ಕೆ.ಶಿವಕುಮಾರ ಅವರನ್ನು ತನ್ನ ವಶಕ್ಕೆ ಪಡೆದಿತ್ತು. ಕಳೆದ ಒಂದೂವರೆ ತಿಂಗಳಿನಿಂದ ಡಿ.ಕೆ.ಶಿವಕುಮಾರ ಬಂಧನದಲ್ಲೇ ಇದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ