ಟ್ರಾಫಿಕ್ ನಿಯಂತ್ರಣಕ್ಕೆ ಡಿಸಿಎಂ ಹೊಸ ಪ್ಲಾನ್
ಪ್ರಗತಿವಾಹಿನಿ ಸುದ್ದಿ: “ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.
ಮೆಟ್ರೋ ಪ್ರಯಾಣ ಟಿಕೆಟ್ ಹಾಗೂ ಕುಡಿಯುವ ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, “ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ” ಎಂದರು.
ನೀರಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ
ನೀರಿನ ದರ ಏರಿಕೆ ಬಗ್ಗೆ ಕೇಳಿದಾಗ, “ಕುಡಿಯುವ ನೀರಿನ ದರ ಏರಿಕೆ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದೆ ಇಡಲಾಗುವುದು. ನೀರಿನ ದರ ಏರಿಕೆಯಾಗಿ 14 ವರ್ಷಗಳಾಗುತ್ತಾ ಬಂದಿದೆ. ಮಂಡಳಿಗೆ ವರ್ಷಕ್ಕೆ ₹ 1 ಸಾವಿರ ಕೋಟಿ ನಷ್ಟವಾಗುತ್ತಿರುವ ಕಾರಣಕ್ಕೆ ದರ ಏರಿಕೆ ಅನಿವಾರ್ಯವಾಗಿದೆ. ಬಿಡ್ಲ್ಯೂ ಎಸ್ ಎಸ್ ಬಿ ಅವರು ಈಗಾಗಲೇ ವರದಿ ನೀಡಿದ್ದು ಇದನ್ನು ಕ್ಯಾಬಿನೆಟ್ ಮುಂದೆ ಇಡಲಾಗುವುದು” ಎಂದರು.
ವಿದ್ಯುತ್ ದರ ಏರಿಕೆ ವಿಚಾರವಾಗಿ ಕೇಳಿದಾಗ, ಕಳೆದ ಬಾರಿ ವಿದ್ಯುತ್ ದರ ಕಡಿಮೆ ಮಾಡಿದ್ದೇವೆ. ಇದನ್ನು ಒಮ್ಮೆಯೂ ಮಾಧ್ಯಮಗಳು ತೋರಿಸುವುದಿಲ್ಲ. ಕೇವಲ ದರ ಏರಿಕೆ ಬಗ್ಗೆ ಮಾತ್ರ ಸುದ್ದಿ ಮಾಡುತ್ತೀರಿ” ಎಂದರು.
ಸಂಚಾರ ದಟ್ಟಣೆ ನಿವಾರಣೆಗೆ, ಡಬಲ್ ಡೆಕ್ಕರ್ ನಿರ್ಮಾಣ, ನಗರ ಸೌಂದರ್ಯೀಕರಣಕ್ಕೆ ಒತ್ತು
“ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ನಿರ್ಮಾಣ ಸೇರಿದಂತೆ ನಗರ ಸೌಂದರ್ಯೀಕರಣಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.
“ಹೆಬ್ಬಾಳ, ಗೊರಗುಂಟೆಪಾಳ್ಯ, ಬಿಇಎಲ್ ಕಡೆಯ ರಸ್ತೆ, ಲೊಟ್ಟೆಗೊಲ್ಲಹಳ್ಳಿ, ಸುಮ್ಮನಹಳ್ಳಿ ಭಾಗದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಎಂಆರ್ ಸಿಎಲ್, ಬಿಡಿಎ ಕಮಿಷನರ್ ಗಳು ಒಟ್ಟಿಗೆ ನಗರ ಪ್ರದಕ್ಷಿಣೆ ಹಾಕಿ ಸಂಚಾರ ದಟ್ಟನೆ ಹೆಚ್ಚಿರುವ ಕಡೆ ಅನುಕೂಲವಾಗುವಂತೆ ಎಲ್ಲೆಲ್ಲಿ ಮೇಲ್ಸೇತುವೆ, ಅಂಡರ್ ಪಾಸ್ ಗಳು, ಸುರಂಗ ರಸ್ತೆಗಳು ಮಾಡುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ” ಎಂದು ವಿವರಿಸಿದರು.
“ಈ ಹಿಂದೆಯೇ ಅಧಿಕಾರಿಗಳಿಗೆ ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅವರು ವರದಿ ತಯಾರು ಮಾಡಿದ್ದರು. ಆದರೆ ನಾನೇ ಖುದ್ದಾಗಿ ಕಣ್ಣಾರೇ ನೋಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು, ತಾಂತ್ರಿಕ ಸಿಬ್ಬದಿಗಳ ಜೊತೆ ನಗರ ಪ್ರದಕ್ಷಿಣೆ ಮಾಡಿದೆ. ಈ ವೇಳೆ ಎಲ್ಲೆಲ್ಲಿ ಭೂ ಸ್ವಾಧೀನ ಮಾಡಬೇಕು ಎನ್ನುವ ಬಗ್ಗೆಯೂ ಚರ್ಚೆ ಮಾಡಿದ್ದೇನೆ” ಎಂದರು.
“ಭವಿಷ್ಯದಲ್ಲಿ ಮೆಟ್ರೋ ನಿಲ್ದಾಣಗಳು ಇರುವ ಕಡೆ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಪ್ರಸ್ತುತ ಅನೇಕ ಕಡೆ ರಸ್ತೆ ಬದಿ, ಖಾಸಗಿ ಜಾಗಗಳಲ್ಲಿ ವಾಹನಗಳನ್ನು ನಿಲ್ಲಿಸಿ ಮೆಟ್ರೋ ಪ್ರಯಾಣ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ. ಮೂರನೇ ಹಂತದ ಮೆಟ್ರೋ ಮಾರ್ಗ ಅನುಷ್ಠಾನದ ವೇಳೆ ಡಬಲ್ ಡೆಕ್ಕರ್ ವ್ಯವಸ್ಥೆ ಇರಲೇಬೇಕು ಎನ್ನುವ ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗಿದೆ. ದಿನಕಳೆದಂತೆ ಮುಂದಕ್ಕೆ ರಸ್ತೆಗಳನ್ನು ಅಗಲೀಕರಣ ಮಾಡಲು ಕಷ್ಟವಾಗುತ್ತದೆ. ಜೊತೆಗೆ ಭೂ ಸ್ವಾಧೀನ ಪರಿಹಾರವು ಹೆಚ್ಚಳವಾದ ಕಾರಣಕ್ಕೆ ಈ ಪ್ರಮುಖ ತೀರ್ಮಾನ ಮಾಡಲಾಗಿದೆ. ನನಗೆ ಏರ್ ಪೋರ್ಟ್ ರಸ್ತೆಯ ಮೆಟ್ರೋ ಮಾರ್ಗವನ್ನು ಈ ರೀತಿ ಮಾಡಬೇಕು ಎನ್ನುವ ಆಲೋಚನೆಯಿತ್ತು. ಈಗಾಗಲೇ ಪಿಲ್ಲರ್ ಗಳನ್ನು ಹಾಕಿರುವ ಕಾರಣಕ್ಕೆ ಸಾಧ್ಯವಿಲ್ಲ” ಎಂದು ಹೇಳಿದರು.
ಮೆಟ್ರೋ ಪಿಲ್ಲರ್ ಗಳಲ್ಲಿ ಜಾಹೀರಾತಿಗೆ ಅವಕಾಶ
“ಬ್ರಾಂಡ್ ಬೆಂಗಳೂರು ಯೋಜನೆಯಡಿ ನಗರವನ್ನು ಸೌಂದರ್ಯೀಕರಣ ಮಾಡುವ ಸಲುವಾಗಿ ಬಿಬಿಎಂಪಿ, ಬಿಎಂಆರ್ ಸಿಎಲ್ ಒಟ್ಟಿಗೆ ಸೇರಿ ತೀರ್ಮಾನ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಮೆಟ್ರೋ ಪಿಲ್ಲರ್ ಗಳಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡಬೇಕು. ಎರಡೂ ಸಂಸ್ಥೆಗಳು ಶೇ 50:50 ಅನುಪಾತದಲ್ಲಿ ಕೆಲಸ ಮಾಡಬೇಕು, ಆದಾಯವನ್ನು ಇದೇ ಮಾದರಿಯಲ್ಲಿ ಹಂಚಿಕೊಳ್ಳಬೇಕು ಎಂದು ಸೂಚಿಸಲಾಗಿದೆ” ಎಂದರು.
ಬೆಂಗಳೂರು ಅಭಿವೃದ್ಧಿ; ಅನುದಾನದ ಬಗ್ಗೆ ಸಿಎಂಗೆ ವರದಿ ಸಲ್ಲಿಕೆ
“ಹೆಬ್ಬಾಳ ಮೇಲ್ಸೆತುವೆ ಬಳಿ ಇರುವ ಬಿಡಿಎ ಜಾಗದಲ್ಲಿ ಅಲ್ಲಿ ಪರ್ಯಾಯ ರಸ್ತೆ ಮಾಡಲಾಗುತ್ತಿದೆ. ಇದು ಏಪ್ರಿಲ್ 30 ಕ್ಕೆ ಕಾಮಗಾರಿ ಮುಗಿಸಬೇಕು ಮೇ ಹೊತ್ತಿಗೆ ಉದ್ಘಾಟನೆಯಾಗಬೇಕು ಎಂದು ಸೂಚಿಸಲಾಗಿದೆ. ಈ ಕಾರಣಕ್ಕೆ ಗುತ್ತಿಗೆದಾರರನ್ನು ಕರೆಸಿ ಸೂಚನೆ ನೀಡಲಾಗಿದೆ. ತುಮಕೂರಿನಿಂದ ಕೆ.ಆರ್ ಪುರಂಗೆ ಹೋಗುವ ರಸ್ತೆ ಬಳಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಾಣಕ್ಕೆ ಬಿಡಿಎ, ಮೆಟ್ರೋ, ಬಿಬಿಎಂಪಿ ಸೇರಿ ಅಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ. ಈ ಕಾಮಗಾರಿಯನ್ನು ಬಿಡಿಎ ನಿರ್ವಹಿಸಲಿದೆ. ರಾಜ್ಯ ಬಜೆಟ್ ಇರುವ ಕಾರಣಕ್ಕೆ ಬೆಂಗಳೂರು ಅಭಿವೃದ್ದಿ ಹಾಗೂ ನೀರಾವರಿ ಇಲಾಖೆಗೆ ಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳ ಬಳಿ ಚರ್ಚೆ ಮಾಡಿ ಶುಕ್ರವಾರ ಮುಖ್ಯಮಂತ್ರಿಗಳಿಗೆ ನೀಡಲಾಗುವುದು” ಎಂದು ಹೇಳಿದರು.
ಒಟ್ಟು ಎಷ್ಟು ಕಡೆ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು ಎಂದು ಕೇಳಿದಾಗ, “ಹೊಸದಾಗಿ ನಿರ್ಮಾಣ ಮಾಡುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ಸುಮಾರು 40 ಕಿ.ಮೀ ಮಾರ್ಗದಲ್ಲಿ ನಿರ್ಮಾಣ ಮಾಡುವ ಆಲೋಚನೆಯಿದೆ. ನಾವು ಇಂದಿಗೆ ಮಾತ್ರ ಯೋಚನೆ ಮಾಡುತ್ತಿಲ್ಲ. ಮುಂದಿನ 30 – 40 ವರ್ಷದ ಭವಿಷ್ಯವನ್ನು ಇಟ್ಟುಕೊಂಡು ಆಲೋಚನೆ ಮಾಡಲಾಗುವುದು. ಇದರ ಖರ್ಚು ವೆಚ್ಚವನ್ನು ಶೇ.50: 50 ಅನುಪಾತದಲ್ಲಿ ಬಿಬಿಎಂಪಿ, ಬಿಎಂಆರ್ ಸಿಎಲ್ ವಹಿಸಿಕೊಳ್ಳುವುದು” ಎಂದರು.
ಡಬಲ್ ಡೆಕ್ಕರ್ ಗೆ ₹ 9,800 ಕೋಟಿ ವೆಚ್ಚ
“ಡಬಲ್ ಡೆಕ್ಕರ್ ಮಾಡಲು ಹೆಚ್ಚುವರಿ ₹ 9,800 ಕೋಟಿ ವೆಚ್ಚವಾಗುತ್ತದೆ. ಈಗ ಪಶ್ಚಿಮ ಭಾಗದಲ್ಲಿ ಮಾತ್ರ ಮಾಡಲಾಗುತ್ತಿದೆ. ಈಗಾಗಲೇ ರಾಗಿಗುಡ್ಡ ಭಾಗದಲ್ಲಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಇನ್ನೂ ಒಂದಷ್ಟು ಸುಧಾರಣೆಗಳನ್ನು ಮಾಡಿಕೊಳ್ಳಬೇಕಿದೆ. ಎಲ್ಲವನ್ನು ಬಗೆಹರಿಸಿ ಮುಂದುವರೆಯಲಾಗುವುದು” ಎಂದರು.
ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕೇಳಿದಾಗ, “ಎರಡು ಪ್ರಕರಣಗಳು ನಡೆದಿದ್ದವು” ಎಂದರು.
ಬಜೆಟ್ ಅಲ್ಲಿ ಗ್ರೇಟರ್ ಬೆಂಗಳೂರು ಘೋಷಣೆ ಮಾಡಲಾಗುವುದೇ ಎಂದು ಕೇಳಿದಾಗ, “ಈ ವಿಚಾರದ ಬಗ್ಗೆ ಕ್ಯಾಬಿನೆಟ್ ಅಲ್ಲಿ ಬಿಡದಿ ಬಳಿ ಟೌನ್ ಶಿಪ್ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದ್ದಾರೆ. ಈಗಾಗಲೇ ಸಾರ್ವಜನಿಕರ ಸಲಹೆ, ಸೂಚನೆಗಳನ್ನು ಪಡೆಯಲು ಆಹ್ವಾನ ನೀಡಲಾಗಿದೆ. ರಿಜ್ವಾನ್ ಅವರ ಅಧ್ಯಕ್ಷೆತಯಲ್ಲಿ ಸರ್ವಪಕ್ಷಗಳ ಶಾಸಕರ ಅಭಿಪ್ರಾಯ ಪಡೆಯಲಾಗಿದೆ. ಬೆಂಗಳೂರಿನ ಎಲ್ಲಾ ಶಾಸಕರ ಸಲಹೆ ಪಡೆಯಿರಿ ಎಂದು ನಾನೇ ಹೇಳಿದ್ದೇನೆ. ಮಾಧ್ಯಮಗಳ ಸಲಹೆಯನ್ನೂ ಸಹ ಪಡೆಯಲಾಗುವುದು” ಎಂದು ಹೇಳಿದರು.
ಎರಡನೇ ವಿಮಾನ ನಿಲ್ದಾಣದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ನನಗೆ ಮತ್ತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗುತ್ತದೆ. ನಂತರ ವಿಮಾನ ನಿಲ್ದಾಣ ಪ್ರಾಧಿಕಾರದ ಅಭಿಪ್ರಾಯ ಕೇಳಲಾಗುವುದು. ಅವರ ತೀರ್ಮಾನ ನಂತರ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.
ಬಿಡದಿ ಬಳಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎನ್ನುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನ್ನ ಬಳಿ ಮಾಹಿತಿಯಿಲ್ಲ” ಎಂದರು.
ವ್ಯವಸ್ಥಿತ ನಗರ ಮಾಡುವ ಗುರಿ
ಬೆಂಗಳೂರಿನ ಬಗ್ಗೆ ಡಿ.ಕೆ.ಶಿವಕುಮಾರ್ ಅವರ ಪರಿಕಲ್ಪನೆ ಏನು ಎಂದು ಕೇಳಿದಾಗ, “ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ ಇದು ವ್ಯವಸ್ಥಿತವಾದ ನಗರವಾಗಲಿಲ್ಲ. ಆದ ಕಾರಣ ಇದನ್ನು ಇನ್ನೂ ವ್ಯವಸ್ಥಿತ ನಗರವನ್ನಾಗಿ ಮಾಡುವುದೇ ನನ್ನ ಗುರಿ. ಎಲ್ಲೆಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಬಹುದೋ ಅದು ನನ್ನ ಗುರಿ. ಭವಿಷ್ಯದ ಬೆಂಗಳೂರು ಉತ್ತಮವಾಗಿರಬೇಕು ಎಂಬುದು ನನ್ನ ಕನಸು” ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ಬರುವುದೇ ಎಂದು ಕೇಳಿದಾಗ, “ಈಗಾಗಲೇ ಇದರ ಬಗ್ಗೆ ಜಂಟಿ ಸದನ ಸಮಿತಿ ಚರ್ಚೆ ನಡೆಸುತ್ತಿದೆ. ಬಿಲ್ ಅನ್ನು ಸದನದಲ್ಲಿ ಮಂಡಿಸಲಾಗಿದೆ. ಮಾಧ್ಯಮಗಳು ಚರ್ಚೆ ನಡೆಸಿ” ಎಂದರು.
ಟನಲ್ ರಸ್ತೆಯ ಬಗ್ಗೆ ಹೆಚ್ಚಿನ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, “ಯಾವುದೇ ಟೀಕೆಗಳು ಇಲ್ಲದೇ ನೀವು ಬೆಳೆಯಲು ಸಾಧ್ಯವಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಎಂದರು.
ಬೆಂಗಳೂರಿನಲ್ಲಿ ಅನಧಿಕೃತ 17 ಲಕ್ಷ ಆಸ್ತಿಗಳು ಇರುವ ಬಗ್ಗೆ ಕೇಳಿದಾಗ, “25 ಲಕ್ಷ ಖಾತೆಗಳನ್ನು ತಯಾರು ಮಾಡಲಾಗಿದೆ. ಇನ್ನೂ 7 ಲಕ್ಷ ಖಾತೆಗಳನ್ನು ನೀಡುವುದು ಬಾಕಿಯಿದೆ. ಇದಕ್ಕೂ ಒಂದು ವ್ಯವಸ್ಥೆ ಮಾಡಲಾಗಿದ್ದು ಈಗ ಅದನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ