ತಾಲ್ಲೂಕು ರಚನೆಗೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಆಗ್ರಹಿಸಿ ಶನಿವಾರ ಬೀಡಿ ತಾಲ್ಲೂಕು ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಅಂಗವಾಗಿ ಹೋರಾಟ ಸಮಿತಿಯ ಸದಸ್ಯರು ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರು. ಬೀಡಿ ಮೂಲಕ ಸಾಗುವ ಬೆಳಗಾವಿ-ತಾಳಗುಪ್ಪ ಮತ್ತು ಬೀಡಿ-ಬೆಳವಣಕಿ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬೀಡಿ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ವಿಠ್ಠಲ ಹಿಂಡಲಕರ, “ಬ್ರಿಟಿಷರ ಆಡಳಿತದಲ್ಲಿ ಬೀಡಿ ಗ್ರಾಮ ತಾಲ್ಲೂಕು ಕೇಂದ್ರವಾಗಿತ್ತು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ. ಸಧ್ಯ ಬೀಡಿ ಹೋಬಳಿ ಕೇಂದ್ರವಾಗಿದ್ದು, ಈ ಗ್ರಾಮದ ಮೂಲಕ ಎರಡು ಪ್ರಮುಖ ಹೆದ್ದಾರಿಗಳು ಹಾದುಹೋಗಿವೆ. ಪ್ರಮುಖ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ವಾಣಿಜ್ಯ ಸಂಸ್ಥೆಗಳು ಬೀಡಿಯಲ್ಲಿವೆ.
ಸುತ್ತಲಿನ 50 ಹಳ್ಳಿಗಳಿಗೆ ಇದು ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೀಡಿ ಗ್ರಾಮವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿದರೆ ಈ ಭಾಗದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲಕರವಾಗಿದೆ. ಭವಿಷ್ಯದ ದಿನಗಳಲ್ಲಿ ಬೀಡಿ ಹಾಗೂ ಸುತ್ತಮುತ್ತಲಿನ ಭಾಗ ಅಭಿವೃದ್ಧಿಗೊಳ್ಳಲಿದೆ. ಹೀಗಾಗಿ ಈ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆಯಲು ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದರು.
ಪ್ರತಿಭಟನೆಯಲ್ಲಿ ಬೀಡಿ ಹಾಗೂ ಅಕ್ಕಪಕ್ಕದ ಗ್ರಾಮಗಳ ನಾಗರಿಕರು, ಕನ್ನಡಪರ, ದಲಿತಪರ, ರೈತಪರ ಸಂಘಟನೆಗಳ ಮುಖಂಡರು, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.