*ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಟಕ್ಕರ್ ಕೋಡಲು ಕಾಂಗ್ರೆಸ್ ಸಜ್ಜು: ಏ.17ರಂದು ಕೇಂದ್ರದ ವಿರುದ್ಧ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದಿಂದ ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಇದೇ ಏಪ್ರಿಲ್ 17ರಂದು ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನಿಸಿದ್ದು, ಈ ಮೂಲಕ ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಟಕ್ಕರ್ ನೀಡಲು ಮುಂದಾಗಿದೆ.
ಪ್ರತಿಭಟನೆಯ ರೂಪುರೇಷೆ ಚರ್ಚಿಸಲು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರ ಹಾಲು, ಮೊಸರು ಟೋಲ್ ಬೆಲೆ ಹೆಚ್ಚಿಸಿದ್ದನ್ನು ಖಂಡಿಸಿ ರಾಜ್ಯದಲ್ಲಿ ಹಂತ ಹಂತವಾಗಿ ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ನಡೆಸುತ್ತದ್ದು ಬಿವೈ ವಿಜಯೇಂದ್ರ, ಆರ್ ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಆನಂತರ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರ ಗ್ಯಾಸ್, ಪೆಟ್ರೋಲ್ ಡೀಸೆಲ್ ಬೆಲೆಯನ್ನು ಹೆಚ್ಚಿಗೆ ಮಾಡಿತ್ತು. ಇದೀಗ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ದರ ಏರಿಕೆ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಪ್ರತ್ಯುತ್ತರ ನೀಡಲು ಮುಂದಾಗಿದೆ.
ಜನಾಕ್ರೋಶ ಯಾತ್ರೆ ಮೂಲಕ ಸರ್ಕಾರದ ಇಮೇಜ್ಗೆ ಧಕ್ಕೆ ತರುವ ಬಿಜೆಪು ಪ್ರಯತ್ನಕ್ಕೆ ಪ್ರತಿತಂತ್ರವಾಗಿ ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಯೋಜನೆ ರೂಪಿಸಿದ್ದಾರೆ.
ಪ್ರತಿಭಟನೆ ರೂಪುರೇಷೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಹೈ ವೋಲ್ವೇಜ್ ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಸಚಿವರಾದ ಪರಮೇಶ್ವರ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮುಖ್ಯವಾಗಿ ಪ್ರತಿಭಟನೆ ಯಾವ ಸ್ವರೂಪ ಹೊಂದಿರಬೇಕು, ಹೇಗೆ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗಿದೆ.
ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ
“ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲಿ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.
ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ
ಜೆಡಿಎಸ್ ಪಕ್ಷವೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡಬಾರದು ಎಂದು ಹೇಳಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷದವರು ‘ಸಾಕಪ್ಪಾ ಸಾಕು ಬಿಜೆಪಿ ಸರ್ಕಾರ’ ಎಂದು ಹೋರಾಟ ಮಾಡಲು ಸಲಹೆ ನೀಡುತ್ತೇನೆ. ಅವರು ಸಿದ್ಧಾಂತವನ್ನು ಬಳಸಿಕೊಂಡಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದರು.
ಕರಗಕ್ಕೆ ಅಗತ್ಯ ಸಹಕಾರ
ಕರಗ ಉತ್ಸವಕ್ಕೆ ಅನುದಾನ ನೀಡಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಯಾರು ಬಂದು ಅರ್ಜಿ ನೀಡಿದ್ದಾರೋ ಅವರಿಗೆ ನೆರವು ನೀಡಲಿದ್ದೇವೆ. ಇದಕ್ಕೆ ಬಜೆಟ್ ನಲ್ಲೂ ಅನುದಾನ ಮೀಸಲಿಡಲಾಗಿದೆ. ಅವರು 2-3 ಭಾಗಗಳಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಬಂದರೆ, ಕರಗ ಉತ್ಸವಕ್ಕೆ ಮೊದಲಿನಿಂದಲೂ ಯಾವ ರೀತಿ ನೆರವು ನೀಡುತ್ತಿದ್ದೆವೋ ಅದನ್ನೇ ನೀಡುತ್ತೇವೆ. ನಾವು ಅನುದಾನ ನೀಡದಿದ್ದರೆ ನಮಗೆ ಆಹ್ವಾನ ಯಾಕೆ ನೀಡಿದ್ದಾರೆ?”ಎಂದು ತಿಳಿಸಿದರು.
ಜಾತಿ ಗಣತಿಯು ಜನಗಣತಿಯಲ್ಲ
ಜಾತಿ ಗಣತಿ ವರದಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಕೇಳಿದಾಗ, “ಜಾತಿ ಗಣತಿಯು ಜನಗಣತಿಯಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಮುಖ್ಯಮಂತ್ರಿಗಳು ಹಾಗೂ ನಾನು ಇನ್ನು ವರದಿ ನೋಡಿಲ್ಲ. ನಾವು ಇದನ್ನು ಪರಿಶೀಲನೆ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಅದನ್ನು ಸರಿಪಡಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.