*ಜೂನ್ 4ರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಾಹಿತಿ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರಕಾರದ ಎರಡು ವರ್ಷಗಳ ಸಾಧನಾ ಸಂಭ್ರಮದ ಅಂಗವಾಗಿ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬುಧವಾರ(ಜೂನ್ 4) ಮಧ್ಯಾಹ್ನ 3 ಗಂಟೆಗೆ ಉದ್ಘಾಟಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅತಿಥಿಗಳಾಗಿ ಆಗಮಿಸಲಿದ್ದು, ಶಾಸಕರಾದ ಆಸೀಫ್(ರಾಜು) ಸೇಠ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳ ಅನುಷ್ಠಾನ ಕುರಿತ ಅಂಕಿ-ಅಂಶಗಳು, ಯೋಜನೆಯ ಮಾಹಿತಿ, ಫಲಾನುಭವಿಗಳ ಛಾಯಾಚಿತ್ರ/ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.
ಇದಲ್ಲದೇ ಮುಖ್ಯಮಂತ್ರಿಗಳ ಜತೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲವಾಗುವಂತೆ ಸಾರ್ವಜನಿಕರಿಗಾಗಿ ನಾಲ್ಕು ಸೆಲ್ಫಿ ಪಾಯಿಂಟ್ ಕೂಡ ಸ್ಥಾಪಿಸಲಾಗುವುದು.
ಜೂನ್ 4 ರಿಂದ 10 ರವರೆಗೆ ಮಾಹಿತಿ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಹಿತಿ ಪ್ರದರ್ಶನವನ್ನು ವೀಕ್ಷಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಪ್ರಕಟಣೆಯಲ್ಲಿ ಕೋರಿದ್ದಾರೆ.