
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ. ಊಟಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬ ಎದೆನೋವೆಂದು ಹೇಳುತ್ತಿದ್ದತೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು. ಕಿಕ್ಕೇರಿ ಮೂಲದ ಚೇತನ್ ಹಾಸನದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.
ನಿನ್ನೆ ರಾತ್ರಿ ಅಂಗಡಿಯಿಂದ ಮನೆಗೆ ಬಂದ ಚೇತನ್ ಹೆಂಡತಿ ಮಗು ಜೊತೆ ಊಟಕ್ಕೆ ಕುಳಿತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ನೋಯುತ್ತಿದೆ ಎಂದು ಚೇತನ್ ಪತ್ನಿಗೆ ಹೇಳಿದ್ದಾರೆ. ಮೇಲೆ ಏಳಲೆಂದು ಪ್ರಯತ್ನಿಸಿದರೂ ಸಾಧ್ಯವಗದೇ ಕುಸಿದು ಬಿದ್ದವರು ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಹೃದಯಾಘಾತದಿಂದ ಚೇತನ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.