Kannada NewsKarnataka NewsLatest

*ಸರ್ಕಾರದ ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಮ್ಮ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ.

Home add -Advt

ಈ ಕುರಿತಂತೆ ಡಾ. ಶಾಲಿನಿ ರಜನೀಶ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ, ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆಯನ್ನು ನೀಡದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ನೀಡಿರುವ ತಮ್ಮ ಎಚ್ಚರಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿಯನ್ನು ಪಡೆಯಲು ನೀಡಿರುವ ನಿರ್ದೇಶನವನ್ನು ಉಲ್ಲೇಖಿಸಿರುವುದು ಕೂಡ ಸರ್ಕಾರದ ಕನ್ನಡಪರ ನಿಲುವನ್ನು ಪ್ರಭಾವಶಾಲಿಯಾಗಿ ಅಭಿವ್ಯಕ್ತಿಸಿದೆ. ಅಧಿಕಾರಿ ವರ್ಗ ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಇನ್ನಷ್ಟು ಮುತುವರ್ಜಿಯಿಂದ ಕನ್ನಡದ ಬಳಕೆಗೆ ಮುಂದಾಗಬೇಕೆಂದು ಆಶಿಸಿದ್ದಾರೆ.

ಇತ್ತೀಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಜಿಲ್ಲಾ ಮಟ್ಟದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅವಶ್ಯಕತೆಗಿಂತಲೂ ಹೆಚ್ಚಾಗಿ ಬಳಕೆಯಾಗುವ ಆಂಗ್ಲ ಭಾಷೆಯ ಕುರಿತಂತೆ ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸಿ ತನ್ನ ಪ್ರತಿರೋಧವನ್ನು ದಾಖಲಿಸಿತ್ತು. ವಿಶೇಷವಾಗಿ ಕೆಡಿಪಿ ಸಭೆಗಳಲ್ಲಿ ಕಾಮಗಾರಿ ಇಲಾಖೆಗಳು ತಮ್ಮೆಲ್ಲಾ ಮಾಹಿತಿಗಳನ್ನು ಆಂಗ್ಲಭಾಷೆಯಲ್ಲಿ ಮಂಡಿಸುವುದು ಹಾಗೂ ಅದನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಅನುಮೋದಿಸುವುದು ಆಡಳಿತದಲ್ಲಿ ಕನ್ನಡ ಅನುಷ್ಠಾನದ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದು ಬೇಸರವನ್ನು ವ್ಯಕ್ತಪಡಿಸಿತ್ತು. ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ಕುರಿತಂತೆ ತುರ್ತು ನಿರ್ದೇಶನಕ್ಕೆ ಆಗ್ರಹಿಸಿತ್ತು.

Related Articles

Back to top button