
ಪ್ರಗತಿವಾಹಿನಿ ಸುದ್ದಿ: ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಇಬ್ಬರು ಯುವಕರು ಭೀಮಾನದಿಯ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ವಡೆಗೇರ ತಾಲೂಕಿನ ಮಾಚನೂರ್ ಬಳಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ, ಇದರಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಮಳೆಯ ನಡುವೆಯೂ ಯುವಕರಿಬ್ಬರು ಜಾನುವಾರು ಮೇಯಿಸಲು ಹೋದವರು, ಜಾನುವಾರುಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಸಿದ್ದಪ್ಪ (20) ಹಾಗೂ ರಾಮು (18) ನೀರು ಪಾಲಾಗಿರುವ ಯುವಕರು. ನದಿ ದಡದಲ್ಲಿ ಗ್ರಾಮಸ್ಥರು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಮತ್ತೊಂದೆಡೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಯುವಕರಿಗಾಗಿ ನದಿಯಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದಾರೆ.