
ಪ್ರಗತಿವಾಹಿನಿ ಸುದ್ದಿ : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಒಡೆಯುವಾಗ ಮುಂಬೈನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಅದರ ಬೆನ್ನೆಲೆ ಮತ್ತೊಂದು ದುರಂತ ಸಂಭವಿಸಿದೆ.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ರಥವನ್ನು ಎಳೆಯುತ್ತಿದ್ದ ವಾಹನ ಕೆಟ್ಟು ನಿಂತಿದ್ದಾಗ ಹಲವು ಯುವಕರು ಅದನ್ನು ಕೈಯಿಂದ ತಳ್ಳಲು ಮುಂದಾಗಿದ್ದರು. ಈ ವೇಳೆ ರಥವು ವಿದ್ಯುತ್ ತಂತಿಗೆ ಸಿಲುಕಿ ಈ ಅವಘಡ ಸಂಭವಿಸಿದೆ.
ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39) ಹಾಗೂ ರಾಜೇಂದ್ರ ರೆಡ್ಡಿ (15) ಎಂದು ಗುರುತಿಸಲಾಗಿದೆ.
ಈ ಘಟನೆಯಲ್ಲಿ ಒಂಬತ್ತು ಮಂದಿಗೆ ತೀವ್ರ ವಿದ್ಯುತಾಘಾತ ಉಂಟಾಗಿತ್ತು. ಘಟನೆಯಲ್ಲಿ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.