Kannada NewsKarnataka NewsNationalPolitics

*ಆರು ಜನರ ಸಾವು: ಮುರುಗೇಶ ನಿರಾಣಿ ಪುತ್ರನಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಿರಾಣಿ ವಿರುದ್ಧ ಕಾನೂನು ಪ್ರಕಾರ ತನಿಖೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರ ವಿಜಯ್ ನಿರಾಣಿ ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್  ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದೆ. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್​, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ. 

ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿರುವ ವಿಜಯ್ ನಿರಾಣಿ, ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌‌ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು (ಇಟಿಪಿ) ಸ್ಥಾಪಿಸಿದ್ದರು. ಆ ಘಟಕಕ್ಕೆ ಅನುಮತಿ ಪಡೆದಿರಲಿಲ್ಲ. ಆ ಘಟಕದಲ್ಲಿ 2018ರ ಡಿಸೆಂಬರ್ 16ರಂದು ಬಾಯ್ಲರ್ ಸ್ಫೋಟಗೊಂಡಿದ್ದು. ಆ ದುರ್ಘಟನೆಯಲ್ಲಿ ಆರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಸಂಬಂಧ ಪ್ರಾಥಮಿಕ ತನಿಖೆ ನಡೆಸಿದ್ದ ಪೊಲೀಸರು, ವಿಜಯ್ ನಿರಾಣಿಯವರ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಬಳಿಕ ವಿಜಯ್ ಹಾಗೂ ಅವರ ಕಾರ್ಖಾನೆಯ ಟೆಕ್ನಿಕಲ್ ನಿರ್ದೇಶಕರಾಗಿದ್ದ ಎಂ.ಎಸ್.ಹಟ್ಟಿಕಲ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಈ ಸಂಬಂಧ ವಿಜಯ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣ ಸಂಬಂಧ ವಿಜಯ್ ನಿರಾಣಿಯವರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್ ಬ್ರೇಕ್ ಹಾಕಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. 

Home add -Advt

Related Articles

Back to top button