
ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಿಂತು ಪತ್ನಿಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಶಿಕ್ಷಕ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕೆಮ್ಮಣ್ಣುಗುಂಡಿಯಲ್ಲಿ ನಡೆದಿದೆ.
ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದಾನೆ ದುರ್ಘಟನೆ ಬಳಿ ನಡೆದಿದೆ. ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ.
ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಸಂತೋಷ್ ಬಂದಿದ್ದರು. ಈ ವೇಳೆ ರಸ್ತೆ ಬದಿ ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂತೋಷ್ ಅವರು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.