*ಒಬ್ಬರಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬಹಳಷ್ಟು ನಾಯಕರ, ಕಾರ್ಯಕರ್ತರ ಕೊಡುಗೆ ಇದೆ. ಆದರೆ ಒಬ್ಬರಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡ ಒಪ್ಪುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ನಾಯಕರು, ಶಾಸಕರು, ಕಾರ್ಯಕರ್ತರು ಸೇರಿ ಕೆಲಸ ಮಾಡಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಒಬ್ಬರೇ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆಂದು ಹೇಳಿದರೆ ನಾವು ಒಪ್ಪುವುದಿಲ್ಲ ಎಂದರು.
ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸಿಎಂ ರೇಸ್ ಗೆ ಹೋಂ ಮಿನಿಸ್ಟರ್ ಪರಂ ಎಂಟ್ರಿ ಆಗಿದ್ದಾರೆ. ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ನಾನು ಕೂಡ ಸಿಎಂ ಆಕಾಂಕ್ಷಿ, ಸಿಎಂ ರೇಸ್ ನಲ್ಲಿ ಇದ್ದಿನಿ, ನನಗೂ ಸಿಎಂ ಆಗುವ ಆಸೆ ಇದೆ ಎಂಬ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಸಿಎಂ ಆಗುವ ಅರ್ಹತೆ ಇದೆ. ಅವರು 2013ರಲ್ಲಿ ರಾಜ್ಯದಲ್ಲಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ. ಪರಮೇಶ್ವರ್ ಹೇಳಿಕೆಯಲ್ಲಿ ತಪ್ಪೇನಿದೆ? ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಬೆಂಬಲಿಸುವವರೇ ಎಸ್ಸಿ, ಎಸ್ಟಿ, ಓಬಿಸಿ ಸಮುದಾಯದವರು ಎಂದು ತಿಳಿಸಿದರು.
ಇನ್ನು ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಆದರೆ ಒಬ್ಬರಿಂದಲೇ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುವುದನ್ನು ನಾನು ಒಪ್ಪುವುದಿಲ್ಲ. ಸರ್ಕಾರ ಅಧಿಕಾರಕ್ಕೆ ಬರಲು ಹಲವರ ಪರಿಶ್ರಮ ಇದೆ. ಇದನ್ನು ಯಾರು ಮರೆಯಬಾರದು ಎಂದರು.




