Kannada NewsKarnataka NewsLatestPolitics

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು.

ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಆರಂಭಿಸಲಾಗಿರುವ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ, ಮಹಿಳೆಯರ ರಕ್ಷಣೆಗಾಗಿ ಆರಂಭಿಸಿರುವ ಅಕ್ಕಪಡೆ ಹಾಗೂ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಗಣ್ಯರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಶ್ರೀಮಂತಿ ಇಂದಿರಾ ಗಾಂಧಿ ಅವರು ಬಡವರ ಮಕ್ಕಳಿಗೂ ಶ್ರೀಮಂತರ ಮಕ್ಕಳಂತೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದ ಮಕ್ಕಳ ಅಪೌಷ್ಠಿಕತೆ ನಿವಾರಿಸುವ ದೃಷ್ಟಿಯಿಂದ ಅಂದಿನ ಸಂದರ್ಭದಲ್ಲಿ ಅತಿಯಾಗಿದ್ದ ತಾಯಿ ಹಾಗೂ ಮಗುವಿನ ಸಾವಿನ ಪ್ರಮಾಣವನ್ನು ನಿಯಂತ್ರಿಸುವ ಉದ್ದೇಶದಿಂದ ಆರಂಭಿಸಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ (ಐಸಿಡಿಎಸ್‌) 50 ವರ್ಷಗಳಾಗಿದ್ದರಿಂದ ಯೋಜನೆಯನ್ನು ಇನ್ನಷ್ಟು ಸುಧಾರಿಸುವ ಮೂಲಕ ಸುವರ್ಣ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದರು.

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಅದರಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮುಂದುವರಿದ ಭಾಗವಾಗಿ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಗೃಹ ಇಲಾಖೆಯ ಸಹಕಾರದೊಂದಿಗೆ ಅಕ್ಕಪಡೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಬಡ ಮಕ್ಕಳಿಗೆ ಸರ್ಕಾರದಿಂದಲೇ ಎಲ್ಲ ಸೌಲಭ್ಯಗಳನ್ನು ಒದಗಿಸಿ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಮಹಾತ್ವಾಕಾಂಕ್ಷೆಯಿಂದ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

Home add -Advt

ಗೌರವ ಧನ ಹೆಚ್ಚಿಸಲು ಮನವಿ
ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವ ಧನ ಹೆಚ್ಚಳ ಮಾಡಿದ್ದರು. ಕಳೆದ ವರ್ಷ ಕೂಡ ಮತ್ತೆ ತಲಾ ಒಂದು ಸಾವಿರ ರೂಪಾಯಿ ಹೆಚ್ಚಿಸಿದ್ದಾರೆ. ತನ್ಮೂಲಕ ಕಾಂಗ್ರೆಸ್‌ ಕೊಟ್ಟ ಮಾತಿನಂತೆ ನಡೆಯುವ ಪಕ್ಷ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದೇವೆ. ಈಗ ಪುನಃ ಒಂದು ಸಾವಿರ ರೂಪಾಯಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಳಿ ಮನವಿ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಇಲಾಖೆಗೆ ಕಳೆದ ಎರಡೂವರೆ ವರ್ಷಗಳಿಂದ ಹೊಸ ಸ್ವರೂಪ ನೀಡಲಾಗಿದೆ. ಇಡೀ ರಾಷ್ಟ್ರವೇ ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರ ಹಲವಾರು ರಾಜ್ಯಗಳಿಗೆ ನಮ್ಮ ಮಾದರಿಯನ್ನು ಅನುಸರಿಸುವಂತೆ ಇತರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಇದು ನಮ್ಮ ಸಾಧನೆಗೆ ಹಿಡಿದ ಕನ್ನಡಿಯಾಗಿದೆ ಎಂದರು.

ವಿವಿಧ ಪ್ರಶಸ್ತಿಗಳ ಪ್ರದಾನ

ಇದೇ ವೇಳೆ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯದ ಮಟ್ಟದ ಹಿರಿಯ ನಾಗರಿಕರ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಮಕ್ಕಳ ಕಲ್ಯಾಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಜೊತೆಗೆ 2025-26 ಸಾಲಿನ ಉತ್ತಮ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ, ಸಚಿವ ಎಚ್.ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎಚ್.ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಜಯಮಾಲ ರಾಮಚಂದ್ರ, ವೀರಕುಮಾರ ಪಾಟೀಲ್‌, ಶಾಸಕರಾದ ಬಿ.ಕೆ.ಸಂಗಮೇಶ್‌, ರೂಪಕಲಾ ಶಶಿಧರ್, ಲತಾ ಮಲ್ಲಿಕಾರ್ಜುನ್‌, ಆಸೀಫ್‌ ಸೇಠ್‌, ಬಾಬಾ ಸಾಹೇಬ್‌ ಪಾಟೀಲ್‌, ಉದಯ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್‌ ಹುಕ್ಕೇರಿ, ಬಲ್ಕಿಷ್ ಬಾನು, ಚನ್ನರಾಜ್‌ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಬಾಲ ಭವನದ ಅಧ್ಯಕ್ಷರಾದ ಬಿ.ಆರ್. ನಾಯ್ಡು, ಮಕ್ಕಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸುಂಬೆ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ‌, ಮಾಜಿ ಶಾಸಕ ಶ್ಯಾಮ್‌ ಘಾಟಗೆ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related Articles

Back to top button