* ವಸತಿ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ವಸತಿ ಶಾಲೆಗಳನ್ನು ನಿರ್ಮಾಣ ಮಾಡಲು ಸರ್ಕಾರದ ಆಡಳಿತಾತ್ಮಕ ಅನುಮೋದನೆಯನ್ವಯ ಟೆಂಡರ್ ಕರೆಯಲಾಗಿದ್ದು, ಪ್ರಸ್ತುತ ವಿವಿಧ ಬಿಡ್ದಾರರ ಬಿಡ್ಗಳ ಮೌಲ್ಯಮಾಪನ ಕಾರ್ಯವನ್ನು ನಡೆಸಲಾಗುತ್ತಿದೆ.
ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ನಲ್ಲಿ ಮುಕ್ತ ಟೆಂಡರ್ ಕರೆಯಲಾಗಿದ್ದು, ಅರ್ಹತಾ ಮಾನದಂಡಗಳನ್ನು ಪೂರೈಸುವ ಯಾವುದೇ ಬಿಡ್ದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವನ್ನು ನೀಡಲಾಗಿರುತ್ತದೆ. ಈ ಕಾಮಗಾರಿಯ ಸಮರ್ಪಕ ನಿರ್ವಹಣೆ ಅನುಷ್ಠಾನ ಹಾಗೂ ಮೇಲುಸ್ತುವಾರಿಗೆ ಅನುಕೂಲವಾಗುವಂತೆ ರಾಜ್ಯದ ಕಂದಾಯ ವಿಭಾಗವಾರು ಟೆಂಡರ್ ಕರೆಯಲಾಗಿರುತ್ತದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಹೊರಡಿಸಿರುವ ಸುತ್ತೋಲೆಯನ್ವಯ ಮಂಡಳಿಯ ವತಿಯಿಂದ ವಸತಿ ಶಾಲೆಯನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಮಂಡಳಿಯಿಂದ ಸ್ಥಾಪಿಸಲು ಉದ್ದೇಶಿಸಿರುವ ಶಾಲೆಗಳು ವಸತಿ ಶಾಲೆಗಳಾಗಿದ್ದು ಸರ್ಕಾರಿ ಶಾಲೆಗಳು ವಸತಿ ಶಾಲೆಗಳಾಗಿರುವುದಿಲ್ಲ. ಆದುದರಿಂದ, ಈ ಯೋಜನೆಯ ಪ್ರಸ್ತಾವನೆಯ ಹಂತದಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಿ ನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಸರ್ಕಾರದ ಸಂಸ್ಥೆಯಾದ KREIS ನಿಂದ ಅಗತ್ಯ ಮಾಹಿತಿಯನ್ನು ಪಡೆಯಲಾಗಿರುತ್ತದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ, 1996 ಮತ್ತು ಕರ್ನಾಟಕ ನಿಯಮಗಳು 2006 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಮತ್ತು ಸಾಮಾಜಿಕ ಸುರಕ್ಷತೆಗಾಗಿ ಇರುವ ಶಾಸನವಾಗಿದ್ದು, ಈ ಕಾಯ್ದೆಯಡಿ ಸಂಗ್ರಹವಾದ ಸುಂಕ ಮೊತ್ತವನ್ನು ಸರ್ಕಾರದ ಯಾವುದೇ ಯೋಜನೆಗಳಿಗೆ ವಿನಿಯೋಗಿಸಲು ಅವಕಾಶವಿರುವುದಿಲ್ಲ.
ಎಲ್ಲಾ ನೀತಿ ನಿಯಮಗಳನ್ನು ಪಾಲಿಸಿ ಮುಕ್ತ ಟೆಂಡರ್ ಕರೆದು ಯೋಜನೆಯನ್ನು ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಯಾವುದೇ ಅಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.




