*ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರಕಾರ ರೈತರಿಗಾಗಿ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಕಾಲಕಾಲಕ್ಕೆ ಅವುಗಳನ್ನು ರೈತರಿಗೆ ತಲುಪಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಹುದಲಿ ಗ್ರಾಮದಲ್ಲಿ ಶನಿವಾರ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಲ ಬದಲಾದಂತೆ ತಂತ್ರಜ್ಞಾನಗಳೂ ಬದಲಾಗುತ್ತವೆ. ರೈತರ ಇಳುವರಿ ಹೆಚ್ಚಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತ ಬಂದಿದೆ. ಆದರೆ ಅವು ರೈತರಿಗೆ ಸರಿಯಾಗಿ ತಲುಪಬೇಕು. ಇದು ಅಧಿಕಾರಿಗಳ ಜವಾಬ್ದಾರಿ. ಕಚೇರಿಯಲ್ಲಿ ಕುಳಿತುಕೊಳ್ಳದೆ ರೈತರ ಬಳಿ ತೆರಳಿ ನೆರವು ನೀಡಬೇಕು ಎಂದರು.

ಮಹಿಳೆಯರಿಗಾಗಿ, ಮಕ್ಕಳಿಗಾಗಿ, ರೈತರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಕಾರ್ಯಕ್ರಮ ತಂದಿದ್ದಾರೆ. ಹಾಲಿನ ಬೆಲೆ ಹೆಚ್ಚಳ, ಸಾಲ ಮನ್ನಾ, ಕಬ್ಬಿನ ಬೆಲೆ ಹೆಚ್ಚಳ ಇವೆಲ್ಲ ಸಿದ್ದರಾಮಯ್ಯನವರ ಕೊಡುಗೆಗಳು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಲುವರಾಯ ಸ್ವಾಮಿ ಅವರು ಸಚಿವರಾದ ಮೇಲೆ ಕೃಷಿ ಇಲಾಖೆಯಲ್ಲಿ ಹಲವು ಬದಲಾವಣೆ ತಂದಿದ್ದಾರೆ ಪ್ರಶಂಸಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಚಲುವರಾಯಸ್ವಾಮಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ್ ಮೊದಲಾದವರು ಇದ್ದರು.


