*ಬೆಳಗಾವಿಯಲ್ಲಿ ಮಹಾರಾಷ್ಟ್ರ ಗಡಿ ಭವನ ನಿರ್ಮಾಣಕ್ಕೆ ಅನುಮತಿ ನೀಡಬಾರದು: ಕರವೇ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಗಡಿ ಭವನ ನಿರ್ಮಿಸುವ ಮಹಾರಾಷ್ಟ್ರ ಸರ್ಕಾರದ ಮತ್ತು ಎಂಇಎಸ್ ನಾಯಕರ ನಡೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದ್ದು, ಯಾವುದೇ ಕಾರಣಕ್ಕೂ ಭವನ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.
ಬೆಳಗಾವಿಯ ಶಾಂತಿಯನ್ನು ಕದಡಲು ಮತ್ತು ಭಾಷಾ ವೈಷಮ್ಯದ ವಿಷಬೀಜ ಬಿತ್ತಲು ಈ ಭವನ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿರುವ ಕರವೇ, ಕಳೆದ ಐದು ದಶಕಗಳಿಂದ ಬೆಳಗಾವಿಯಲ್ಲಿ ಪದೆ ಪದೆ ಎಂಇಎಸ್ ನಾಯಕರು ಪುಂಡಾಟಿಕೆ ಪ್ರದರ್ಶಿಸುತ್ತಿದ್ದಾರೆ. ಈಗ ಮಹಾರಾಷ್ಟ್ರ ಸರ್ಕಾರವನ್ನು ಬಳಸಿಕೊಂಡು ‘ಮಹಾರಾಷ್ಟ್ರ ಗಡಿ ಭವನ’ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಈ ಹಿಂದೆ ಹುತಾತ್ಮರ ಭವನ ನಿರ್ಮಿಸಲು ಯತ್ನಿಸಿದ್ದ ನಾಡದ್ರೋಹಿಗಳು, ಈಗ ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿರುವಾಗಲೇ ಇಂತಹ ಕುತಂತ್ರ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.
ಸಾಮಾನ್ಯ ರಾಜ್ಯ ಭವನಗಳಿಗೂ ಮತ್ತು ‘ಗಡಿ ಭವನ’ಕ್ಕೂ ವ್ಯತ್ಯಾಸವಿದ್ದು, ಇದು ಕೇವಲ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಜಮೀನು ಅಥವಾ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಅಪರ ಜಿಲ್ಲಾಧಿಕಾರಿಗಳ ಮೂಲಕ ಕರವೇ ಕಾರ್ಯಕರ್ತರು ಮನವಿ ಮಾಡಿದ್ದಾರೆ.



