CrimeKannada NewsKarnataka NewsLatestPolitics

*ಬಳ್ಳಾರಿ ರಡ್ಡಿಗಳ ಕಾಳಗಕ್ಕೆ ಓರ್ವ ಬಲಿ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಕಾರಣವಾಗಿದೆ.

ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ನಿವಾಸದ ಎದುರು ಗಲಾಟೆಯಾಗಿ ಫೈರಿಂಗ್ ನಡೆದಿದೆ. ಈ ವೇಳೆ ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಯ ಆಪ್ತ ರಾಜಶೇಖರ್(28) ಮೃತ ಪಟ್ಟಿದ್ದಾರೆ.

ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗರ ನಡುವೆ ಭಾರೀ ಘರ್ಷಣೆ ನಡೆದಿದೆ. ಸಾವಿರಾರು ಕಾರ್ಯಕರ್ತರು ಸೇರಿದ್ದ ಈ ಸಂಘರ್ಷದಲ್ಲಿ, ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿಯ ಅಂಗರಕ್ಷಕರು ಗುಂಡು ಹಾರಿಸಿದ ಘಟನೆ ನಡೆದಿದೆ.

ಪರಿಸ್ಥಿತಿ ಕೈಮೀರಿದ ಹಿನ್ನೆಲೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠಿಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ಗಲಾಟೆಯ ವೇಳೆ ಒಬ್ಬರು ಗುಂಡೇಟಿಗೆ ಬಲಿಯಾಗಿದ್ದು, ಆ ಗುಂಡು ಯಾರಿಂದ ಬಂದಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Home add -Advt

ಇನ್ನು ಈ ಘಟನೆಯ ಬಗ್ಗೆ ಗಾಲಿ ಜನಾರ್ಧನ ರೆಡ್ಡಿ ಪ್ರತಿಕ್ರಿಯಿಸಿದ್ದು, ನಾನು ನನ್ನ ಕ್ಷೇತ್ರದ ಕೆಲಸದ ನಿಮಿತ್ತ ಹೊರಗೆ ಹೋಗಿದ್ದೆ. ನಾನು ಇಲ್ಲದ ವೇಳೆ ಭರತ್ ರೆಡ್ಡಿ ಅವರ ಬೆಂಬಲಿಗರು ನನ್ನ ಮನೆಯ ಮುಂದೆ ಕುರ್ಚಿಗಳನ್ನು ಹಾಕಿಕೊಂಡು ಗಲಾಟೆ ನಡೆಸಿದ್ದಾರೆ.

ಈ ವಿಷಯ ನನಗೆ ತಿಳಿದ ತಕ್ಷಣ ನಾನು ಶ್ರೀರಾಮುಲು ಅವರಿಗೆ ಮಾಹಿತಿ ನೀಡಿದ್ದೆ. ನಂತರ ಅವರು ಪೊಲೀಸರ ಸಮ್ಮುಖದಲ್ಲೇ ಈ ವಿಚಾರವನ್ನು ಪ್ರಶ್ನಿಸಿದಾಗ, ಅದರಿಂದ ಪರಿಸ್ಥಿತಿ ಮತ್ತಷ್ಟು ಉದ್ರಿಕ್ತಗೊಂಡು ಗಲಾಟೆ ನಡೆದಿದೆ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.

ನಾನು ಕಾರಿನಿಂದ ಇಳಿದ ಕ್ಷಣದಲ್ಲೇ ಸತೀಶ್ ರೆಡ್ಡಿ ಅವರ ಅಂಗರಕ್ಷಕರು ನಾಲ್ಕು ಸುತ್ತು ಗುಂಡು ಹಾರಿಸಿದರು. ನನ್ನ ಜೀವಕ್ಕೆ ಅಪಾಯ ಉಂಟುಮಾಡುವ ಉದ್ದೇಶದಿಂದಲೇ ಈ ಗಲಾಟೆ ನಡೆದಿದ್ದು, ಹತ್ಯೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

ಘಟನೆ ಬಗ್ಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಶಾಸಕ ಭರತ್​ ರೆಡ್ಡಿಯಿಂದ ಮಾಹಿತಿ ಪಡೆದು ಕೊಂಡಿದ್ದಾರೆ. ಇನ್ನು ಪರಿಸ್ಥಿತಿ ಸುಧಾರಿಸದ ಹಿನ್ನೆಲೆ ಘಟನಾ ಸ್ಥಳದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್​ ಆದೇಶ ಹೊರಡಿಸಿದ್ದಾರೆ. ಜನಾರ್ದನ ರೆಡ್ಡಿ ಬಂಧಿಸುವಂತೆ ಅವರ ನಿವಾಸದೆದುರೇ ಶಾಸಕ ಭರತ್ ರೆಡ್ಡಿ ಠಿಕಾಣಿ ಹೂಡಿದ್ದರೆ, ಇತ್ತ ಶ್ರೀರಾಮುಲು ರೆಡ್ಡಿ ನಿವಾಸದಲ್ಲೇ ಉಳಿದುಕೊಂಡಿದ್ದಾರೆ.

ಘಟನೆ ಸಂಬಂಧ ಶಾಸಕ ಜನಾರ್ದನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಅಲಿಖಾನ್​​​, ದಮ್ಮೂರ ಶೇಖರ್ ಸೇರಿ 11 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Related Articles

Back to top button