*ಎಸ್ ಸಿ/ಎಸ್ ಟಿ ಕಲ್ಯಾಣ ಯೋಜನೆ: ವಸ್ತು ಪ್ರದರ್ಶನಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಯಬಾಗ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯ ಸರಕಾರ ರೂಪಿಸಿರುವ ವಿವಿಧ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಗೆ ಶುಕ್ರವಾರ (ಜ.16) ರಾಯಬಾಗ ತಹಶೀಲ್ದಾರ್ ಮಹಾದೇವ ಸನಮೂರೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದುಕಂಡು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕ ವಿಜಯಕುಮಾರ ಬೆಟಗೇರಿ ಅವರು, ವಸ್ತುಪ್ರದರ್ಶನ ಕುರಿತು ಮಾಹಿತಿ ನೀಡಿದರು.
ರಾಯಬಾಗ ಪುರಸಭೆ ಮುಖ್ಯಾಧಿಕಾರಿ ಸಂಜು ಮಾಂಗ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ, ಸಿ.ಎನ್ ಪಾಟೀಲ, ವಿ. ಬಿ ಪೂಜೇರಿ ಸೇರಿದಂತೆ ಮತ್ತಿತರು ಹಾಜರಿದ್ದರು.
ವಸ್ತುಪ್ರದರ್ಶನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳು ಶಿಕ್ಷಣ, ಉದ್ಯೋಗ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಮತ್ತು ವಿಶೇಷ ಯೋಜನೆಗಳು; ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರದರ್ಶಿಸಲಾಗುತ್ತಿದೆ. ಜನವರಿ 16 ರಿಂದ 18 ರವರೆಗೆ ರಾಯಬಾಗ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನ ನಡೆಯಲಿದೆ.



