*ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ* *ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*


ಪ್ರಗತಿವಾಹಿನಿ ಸುದ್ದಿ, ನಂದಗಡ : ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಮಸ್ತ ಜನತೆಗೆ ಭೋಜನದ ವ್ಯವಸ್ಥೆಯ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಹಿಸಿಕೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸ್ಥಳಕ್ಕೆ ತೆರಳಿ ಅಧಿಕಾರಿಗಳ ಜೊತೆ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಿದರು. ಜೊತೆಗೆ ಭೋಜನ ವ್ಯವಸ್ಥೆಗೆ ಸಂಬಂಧಿಸಿದಂತೆ ಮಾಡಲಾಗುತ್ತಿರುವ ಸಿದ್ಧತೆಗಳನ್ನೂ ಸಹ ಅವರು ಪರಿಶೀಲಿಸಿದರು.
ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಮತ್ತು ಭೋಜನದ ವ್ಯವಸ್ಥೆಯಾಗಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದ ಚನ್ನರಾಜ ಹಟ್ಟಿಹೊಳಿ, ಸೂಕ್ತ ಮಾರ್ಗದರ್ಶನ ನೀಡಿದರು.



