
ಪ್ರಗತಿವಾಹಿನಿ ಸುದ್ದಿ : ಯುವತಿಯನ್ನು ಕೊಲೆ ಮಾಡಿ, ಮೃತದೇಹವನ್ನು ಪೀಸ್ ಮಾಡಿ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ.
ಮೃತಳನ್ನು 19 ವರ್ಷದ ಝಕಿಯಾ ಮುಲ್ಲಾ ಎಂದು ಗುರುತಿಸಲಾಗಿದ್ದು, ಧಾರವಾಡದ ಗಾಂಧಿ ಚೌಕ್ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದೆ. ಹಂತಕರು ಯುವತಿಯ ದೇಹವನ್ನು ಪೀಸ್ ಪೀಸ್ ಮಾಡಿ ಎಸೆದಿದ್ದಾರೆ.
ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಝಕಿಯಾ, ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಆದರೆ ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ. ಬೇರೆ ಯಾವುದೋ ಸ್ಥಳದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಸಾಕ್ಷ್ಯನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



