
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅನಗೋಳದ ಮೂರ್ತಿಕಾರರ ಮನೆಯಲ್ಲಿ ಭಾನುವಾರ ಪೂಜೆ ಸಲ್ಲಿಸಿದರು.

ನಂತರ ಅಲ್ಲಿಂದ ಅಂಬೇವಾಡಿ ಗ್ರಾಮದವರೆಗೆ ಹಮ್ಮಿಕೊಳ್ಳಲಾಗಿರುವ ಭವ್ಯ ಮೆರವಣಿಗೆಗೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಶಿವಾಜಿ ಮಹಾರಾಜ ನಮ್ಮೆಲ್ಲರ ಆರಾಧ್ಯ ದೈವ, ನಮ್ಮೆಲ್ಲರ ಆದರ್ಶ. ಅಂತವರ ಜೀವನವನ್ನು ಇಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ ಎಂದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈ ರಾಷ್ಟ್ರದ ಎಲ್ಲ ಮಹನೀಯರ ಪುತ್ಥಳಿಗಳನ್ನು ಸ್ಥಾಪಿಸುವ ಮೂಲಕ ಅವರ ಸಾಧನೆ, ತ್ಯಾಗಗಳ ಸ್ಮರಣೆ ಮಾಡಲಾಗುತ್ತಿದೆ. ಯುವಕರು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ವಿನಂತಿಸಿದರು.
ಅಂಬೇವಾಡಿ ಗ್ರಾಮದ ಜನರು, ಶಿವಾಜಿ ಮಹಾರಾಜರ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.




