
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಶಾಸಕರು ದಿನ ಬೆಳಗಾದರೇ ಅಧಿಕಾರ ಹಸ್ತಾಂತರ, ಕುರ್ಚಿ ಕಿತ್ತಾಟದ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದು, ಶಾಸಕರ ವರ್ತನೆಗೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಎಐಸಿಸಿ ಅಧ್ಯಕ್ಷರು ಬಾಯಿ ಮುಚ್ಚಿಕೊಂಡಿರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದಕ್ಕಿಂತ ಕಠಿಣವಾಗಿ ಹೇಳೋದಿಕ್ಕೆ ಅವರಿಗೆ ಸಾಧ್ಯವಿಲ್ಲ. ಅಷ್ಟು ಹೇಳಿದಮೇಲೂ ಶಾಸಕರು ಪದೇ ಪದೇ ಮಾತನಾಡುತ್ತಿದ್ದಾರೆ. ಇದು ಯಾಕೋ ಸರಿ ಕಾಣಿಸುತ್ತಿಲ್ಲ ಎಂದು ಗುಡುಗಿದರು.
ಎಐಸಿಸಿ ಅಧ್ಯಕ್ಷರು ಹೇಳಿದ್ದಾಯಿತು, ಸಿಎಂ, ಡಿಸಿಎಂ ಕೂಡ ಹೇಳಿದ್ದಾಯ್ತು ಆದರೂ ಶಾಸಕರು ಹೇಳಿಕೆಗಳನ್ನು ಕೊಡುತ್ತಲೇ ಇರುವುದು ಸರಿಯಲ್ಲ. ನಮಗೆ ಮಾಡಲು ಸಾಕಷ್ಟು ಕೆಲಸಗಳಿವೆ. ದಿನ ಬೆಳಗಾದರೇ ಇದನ್ನೇ ಹೇಳುತ್ತಿರುವುದರಲ್ಲಿ ಅರ್ಥವಿಲ್ಲ. ಎನಫ್ ಈಸ್ ಎನಫ್. ಮತ್ತೆ ಅದನ್ನು ಮುಂದುವರೆಸಬಾರದು ಎಂದರು.
ಜನ ನಮ್ಮನ್ನು ಆಯ್ಕೆ ಮಾಡಿ ಕಳಿಸಿರುವುದು ಯಾಕೆ? ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಬಿಟ್ಟು ದಿನಕ್ಕೊಂದು ಹೇಳಿಕೆ ಕೊಡುತ್ತಾ ಇರುವುದು ಸರಿಯಲ್ಲ ಎಂದು ಹೇಳಿದರು.


