*ಚೋರ್ಲಾ ಘಾಟ್ನಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್*

ದರೋಡೆಯೇ ನಡೆದಿಲ್ಲ: ಇದೊಂದು ಸುಳ್ಳು ಕಥೆ ಎಂದ SIT
ಪ್ರಗತಿವಾಹಿನಿ ಸುದ್ದಿ: ಚೋರ್ಲಾ ಘಾಟ್ನಲ್ಲಿ ನಡೆದಿತ್ತು ಎನ್ನಲಾಗಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮಹಾರಾಷ್ಟ್ರ ಎಸ್ಐಟಿ ತನಿಖಾ ವರದಿ ಪ್ರಕಾರ, ದರೋಡೆ ನಡೆದಿದ್ದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಸಂದೀಪ್ ಪಾಟೀಲ್ ನೀಡಿದ ದೂರು ಸುಳ್ಳು ಎಂದಿರುವುದಾಗಿ ಮೂಲಗಳು ತಿಳಿಸಿವೆ. ಇದೀಗ ಪಾಟೀಲ್ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆದಿದೆ ಎಂದೂ ಹೇಳಲಾಗಿದೆ.
ಕರ್ನಾಟಕ-ಗೋವಾ ಗಡಿ ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ದರೋಡೆಯೇ ನಡೆದಿಲ್ಲ ಇದೊಂದು ಸುಳ್ಲು ಕಥೆ ಎಂದು ಮಹಾರಾಷ್ಟ್ರ ಎಸ್ ಐಟಿ ತನಿಖೆಯಲ್ಲಿ ಬಯಲಾಗಿದೆ.
ಬೆಳಗಾವಿ ಸಮೀಪದ ಗಡಿ ಪ್ರದೇಶದಲ್ಲಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನು ದರೋಡೆ ಮಾಡಲಾಗಿದೆ ಎಂದು ನೀಡಿದ್ದ ದೂರಿನ ಮೇಲೆ ಮಹಾರಾಷ್ಟ್ರ ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸಿತ್ತು. ಸುಮಾರು ಒಂದು ತಿಂಗಳ ಕಾಲ ತನಿಖೆ ನಡೆಸಿದ ಎಸ್ಐಟಿ ತಂಡ, ಬೆಳಗಾವಿ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಬಳಿ ದರೋಡೆ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ವರದಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ದೂರು ನೀಡಿದ್ದ ಸಂದೀಪ್ ಪಾಟೀಲ್ ಹೇಳಿಕೆಯಲ್ಲಿ ಸ್ಥಳ, ಸಮಯ, ಪ್ರಯಾಣ ಮಾರ್ಗ ಹಾಗೂ ಕರೆ ವಿವರಗಳಲ್ಲಿ ಗಂಭೀರ ವ್ಯತ್ಯಾಸಗಳು ಕಂಡುಬಂದಿವೆ ಎಂಬುದು ಎಸ್ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ.
ಇದರ ಆಧಾರವಾಗಿ ಚೋರ್ಲಾ ಘಾಟ್ನಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಎಸ್ಐಟಿ ಸ್ಪಷ್ಟಪಡಿಸಿದೆ. ಹೀಗಾಗಿ ಸಾಕ್ಷ್ಯಗಳ ಕೊರತೆಯಿಂದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ನ್ಯಾಯಾಲಯ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.



