*ಮಹಿಳೆಯರ ಸ್ವಾವಲಂಬನೆಗೆ ಸಮಾಜಸೇವೆಯ ಸ್ಪರ್ಶ: ತಿಮ್ಮಾಪುರದ ಮಹಿಳೆಯರ ಕಾರ್ಯ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*


ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಬನೆಯನ್ನು ಸಮಾಜಮುಖಿ ಕಾರ್ಯಗಳೊಂದಿಗೆ ಜೋಡಿಸುತ್ತಿರುವುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚಿ ಅಭಿನಂದಿಸಿದ್ದಾರೆ.
ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಮಹಿಳೆಯರು ಕೈಗೊಂಡಿರುವ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮಗಳಲ್ಲಿ ಸುಮಾರು 850ಕ್ಕೂ ಹೆಚ್ಚು ಮಹಿಳೆಯರು ಸರ್ಕಾರದ ಗೃಹಲಕ್ಷ್ಮೀ ಯೋಜನೆ ಮೂಲಕ ದೊರೆಯುವ ಮಾಸಿಕ ಹಣವನ್ನು ಒಟ್ಟುಗೂಡಿಸಿ ಗ್ರಾಮಾಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಗಳಿಗೆ ಬಳಸಿದ್ದಾರೆ.
ವಿಶೇಷವಾಗಿ ತಿಮ್ಮಾಪುರ ಗ್ರಾಮದ ಮಹಿಳೆಯರು ತಮ್ಮ ನೆರವು ಮೊತ್ತವನ್ನು ಸಂಗ್ರಹಿಸಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ಸಮಾಜಸೇವೆಯ ಉಜ್ವಲ ಉದಾಹರಣೆಯಾಗಿದೆ ಎಂದು ಸಚಿವರು ಪ್ರಶಂಸಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರು ವೈಯಕ್ತಿಕ ಅಗತ್ಯಗಳಿಗೆ ಮಾತ್ರವಲ್ಲದೆ ಗ್ರಾಮ ಹಿತಕ್ಕಾಗಿ ನೆರವಿನ ಮೊತ್ತವನ್ನು ಬಳಸಿರುವುದು ಸಾಮಾಜಿಕ ಜವಾಬ್ದಾರಿಯ ಸಂಕೇತ ಎಂದು ಅವರು ಪ್ರಶಂಸಿಸಿದ್ದಾರೆ.
ಇಂತಹ ನಿಸ್ವಾರ್ಥ ಸೇವಾ ಮನೋಭಾವ ರಾಜ್ಯದಾದ್ಯಂತ ಹೆಚ್ಚಾಗಿ, ಗ್ರಾಮೀಣ ಅಭಿವೃದ್ಧಿಗೆ ಪ್ರೇರಣೆಯಾಗಲಿ ಎಂದು ಸಚಿವೆ ಶುಭ ಹಾರೈಸಿದ್ದಾರೆ.



