Belagavi NewsBelgaum NewsKannada NewsKarnataka NewsLatest

*ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳವಡಿ ಸಂಸ್ಥಾನದ ವೀರ ಜ್ಯೋತಿಯನ್ನು ಬೆಳವಡಿಯ ಮಲ್ಲಮ್ಮನ ವೃತ್ತದಲ್ಲಿ ಶನಿವಾರ (ಫೆ.28) ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಂಭ್ರಮದಿಂದ ಬರಮಾಡಿಕೊಂಡು, ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.

ಬೆಳವಡಿ ಮಲ್ಲಮ್ಮನ ಹುಟ್ಟೂರು ಶಿರಸಿ ಸಮೀಪದ ಸೋಂದಾದಿಂದ ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೆಳವಡಿಗೆ ಆಗಮಿಸಿದ ವೀರ ಜ್ಯೋತಿಗೆ ಪೂಜೆ ಸಲ್ಲಿಸುವುದರ ಮೂಲಕ ಸಡಗರದಿಂದ ಬರಮಾಡಿಕೊಳ್ಳಲಾಯಿತು. 

ಬಳಿಕ ಬೆಳವಡಿ ಮಲ್ಲಮ್ಮನ ಪುತ್ಥಳಿ ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೂಡಲಸಂಗಮ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಗಣ್ಯಮಾನ್ಯರಿಂದ ಮಾಲಾರ್ಪಣೆ ಮಾಡಲಾಯಿತು.

ವಿವಿಧ ಕಲಾ ತಂಡಗಳ ಆಕರ್ಷಕ ಮೆರವಣಿಗೆ

Home add -Advt

ರಾಣಿ ಮಲ್ಲಮ್ಮನ ವೇಷಧಾರಿ, ಡೊಳ್ಳುಕುಣಿತ, ಗೊಂಬೆಕುಣಿತ, ವೀರಗಾಸೆ, ಕುದುರೆಕುಣಿತ, ಜನಪದವಾದ್ಯಗಳು, ನಗಾರಿ, ಕುಂಭ ಹೊತ್ತ ನೂರಾರು ಮಹಿಳೆಯರು, ಕಥಕ್ಕಳಿ ತಂಡಗಳ ಮೆರವಣಿಗೆಯು ನೋಡುಗರ ಕಣ್ಣಿಗೆ ಮೆರಗು ನೀಡಿದವು. ಬೆಳವಡಿ ಮಲ್ಲಮ್ಮನ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಬೆಳವಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ, ಐಪಿಎಸ್ ಪ್ರೊಬೇಷನರಿ ಅಧಿಕಾರಿ ಡಾ.ಭಾನುಪ್ರಕಾಶ‌ ಜೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರವೀಣ ಜೈನ, 

ಬೈಲಹೊಂಗಲ ತಹಶೀಲ್ದಾರ್ ಹನುಮಂತ ಶಿರಹಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಬೆಳವಡಿ ಗ್ರಾಮಸ್ಥರು ಹಾಜರಿದ್ದರು. ಬೈಲಹೊಂಗಲ ಸೇರಿದಂತೆ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related Articles

Back to top button