*15 ದಿನದ ಮಗು ಅನುಮಾನಾಸ್ಪದ ಸಾವು ಪ್ರಕರಣ: ತಂದೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ 15 ದಿನದ ಹಿಂದೆ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣದಲ್ಲಿ ತೀವ್ರ ತಿರುವು ಕಂಡಿದ್ದು ಹೆಣ್ಣು ಮಗು ಜನಿಸಿದ್ದಕ್ಕೆ ತಂದೆಯೇ ವಿಷ ನೀಡಿದ್ದಾನೆಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಭೀಮರಾಯ ಚಿಪ್ಪಾಡೆ ಬಂಧಿತ ಆರೋಪಿಯಾಗಿದ್ದಾನೆ. ಈ ದುರ್ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಮಾರ್ಚ್ 17ರಂದು ನಡೆದಿದೆ. ಈ ಸಂಬಂಧ ಮಗುವಿನ ತಾಯಿ ಶೀಲಾ ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಒಂದು ವರ್ಷದ ಹಿಂದೆ ಭೀಮರಾಯ ಮತ್ತು ಶೀಲಾ ವಿವಾಹವಾಗಿದ್ದರು. ಕೂಲಿ ಕೆಲಸ ಮಾಡುತ್ತಿದ್ದ ಭೀಮರಾಯಗೆ ಗಂಡು ಮಗುವಿನ ಆಸೆ ಹೆಚ್ಚಾಗಿತ್ತು. ಆದರೆ 15 ದಿನಗಳ ಹಿಂದೆ ಹೆಣ್ಣು ಮಗು ಜನಿಸಿದ ಹಿನ್ನೆಲೆ ಅಸಮಾಧಾನಗೊಂಡಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ಪತ್ನಿಯ ತವರು ಮನೆಗೆ ಭೇಟಿ ನೀಡಿ ಮಗು ನೋಡಿ ಹಿಂದಿರುಗಿದ ಬಳಿಕ, ಮಗು ಏಕಾಏಕಿ ಅಸ್ವಸ್ಥಗೊಂಡಿದೆ.
ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಿಮ್ಸ್ ನಲ್ಲಿ ಚಿಕಿತ್ಸೆ ನೀಡುವಷ್ಟರಲ್ಲಿ ಮಗು ಮೃತಪಟ್ಟಿದೆ. ಹತ್ತಿ ಬೆಳೆಗೆ ಸಿಂಪಡಣೆ ಮಾಡುವ ವಿಷಕಾರಿ ಔಷಧಿಯನ್ನು ಮಗುವಿಗೆ ನೀಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು.
ಮರಣೋತ್ತರ ಪರೀಕ್ಷೆಗಾಗಿ ಮಗುವಿನ ಶವವನ್ನು ಶವಗಾರಕ್ಕೆ ಸ್ಥಳಾಂತರಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ, ನಾಪತ್ತೆಯಾಗಿದ್ದ ಭೀಮರಾಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


