Karnataka NewsLatestPolitics

*ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನ: ಸಾವಿರಾರು ಜನರ ಅಹವಾಲುಗಳಿಗೆ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಈ ಜನತಾ ದರ್ಶನ ಮಧ್ಯಾಹ್ನ 2 ಗಂಟೆಯವರೆಗೆ ನಿರಂತರವಾಗಿ ನಡೆಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಸಮಸ್ಯೆಗಳು, ಅಹವಾಲುಗಳು ಮತ್ತು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಇ ಖಾತಾ, ಮಂದಿರ ನಿರ್ಮಾಣ, ಉದ್ಯೋಗ, ಪಿಂಚಣಿ, ಮನೆ ನಿರ್ಮಾಣ, ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದ ಮನವಿಗಳನ್ನು ಜನರು ಸಲ್ಲಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತಿಯೊಬ್ಬರ ಸಮಸ್ಯೆಯನ್ನು ಸಮಾಧಾನದಿಂದ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೆಲವು ತುರ್ತು ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡರು.

Home add -Advt


“ಜನರ ಸಮಸ್ಯೆಗಳನ್ನು ನೇರವಾಗಿ ಕೇಳುವುದು ಮತ್ತು ಅವುಗಳಿಗೆ ತಕ್ಷಣ ಸ್ಪಂದಿಸುವುದು ಸರ್ಕಾರದ ಪ್ರಮುಖ ಹೊಣೆಗಾರಿಕೆ. ಜನತಾ ದರ್ಶನವು ಜನರಿಗೆ ಸರ್ಕಾರದೊಂದಿಗೆ ನೇರ ಸಂಪರ್ಕ ಸಾಧಿಸುವ ವೇದಿಕೆಯಾಗಿದೆ,” ಎಂದು ಈ ಸಂದರ್ಭದಲ್ಲಿ ಸಚಿವೆ ಹೇಳಿದರು.
ಕಾರ್ಯಕ್ರಮದ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ, ಬಾಳು ದೇಸೂರಕರ್ ಸರಿದಂತೆ ಹಲವು ಮುಖಂಡರು, ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಜನತಾ ದರ್ಶನದಲ್ಲಿ ಜನಸಾಮಾನ್ಯರ ಉತ್ಸಾಹಭರಿತ ಭಾಗವಹಿಸುವಿಕೆ ಗಮನಸೆಳೆದಿದ್ದು, ತಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ದೊರೆಯುತ್ತಿದೆ ಎಂಬ ವಿಶ್ವಾಸವನ್ನು ಜನರು ವ್ಯಕ್ತಪಡಿಸಿದರು.

Related Articles

Back to top button