*ರಣ ಬಿಸಿಲು: ರಾತ್ರಿಯಲ್ಲಿಯೂ ಬಿಸಿ ಗಾಳಿ ಎಚ್ಚರಿಕೆ: ಜಲಮೂಲಗಳು ಆವಿಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ರಣಬಿಸಿಲ ಅಬ್ಬರ ಹೆಚ್ಚುತ್ತಿದೆ. ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದ್ದು, ರಾತ್ರಿ ವೇಳೆಯೂ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು ಮತ್ತು ರಾತ್ರಿ ಎರಡೂ ವೇಳೆಯಲ್ಲೂ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಇದು ಮಣ್ಣಿನ ತೇವಾಂಶವನ್ನು ವೇಗವಾಗಿ ಕಡಿಮೆ ಮಾಡುತ್ತದೆ ಮತ್ತು ಜಲಮೂಲಗಳ ಆವಿಯಾಗುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ಕೆರೆ ಮತ್ತು ಜಲಾಶಯಗಳು ಬೇಗ ಬತ್ತುವ ಸಂಭವವಿದೆ. ಇದು ಪಕ್ಷಿ, ಪ್ರಾಣಿ ಮತ್ತು ಜನರಿಗೆ ತೊಂದರೆ ಉಂಟುಮಾಡಬಹುದು ಎಂದು ಅವರು ಹೇಳಿದ್ದಾರೆ.
ಒಂದು ವಾರದವರೆಗೆ ರಾಜ್ಯದ ಒಳನಾಡಿನಲ್ಲಿ ಟ್ರಫ್ ಇರುವುದರಿಂದ ಕೆಲವೆಡೆ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಮಳೆಯು ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ತಂಪು ನೀಡಬಹುದಾದರೂ, ಉಷ್ಣ ಅಲೆ ಕಡಿಮೆಯಾಗುವುದುಲ್ಲ ಎಂದು ತಿಳಿಸಿದ್ದಾರೆ.



