
ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಬೆಟ್ಟಿಂಗ್ ಕೇಸ್ ವೊಂದಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ.
ಕಬಡ್ಡಿ ಪಂದ್ಯಾವಳಿಯಲ್ಲಿ ₹500 ಬೆಟ್ಟಿಂಗ್ ಕಟ್ಟಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೆಶ್ವರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶಿಸಿದೆ.
ಸಾರ್ವಜನಿಕವಾಗಿ ಬೆಟ್ಟಿಂಗ್ ಕಾನೂನುಬಾಹಿರವಾಗಿದ್ದರೂ, ಸ್ವತಃ ಸಚಿವರು ತಾನು ಕೇವಲ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆಯೇ ಅವರಿಗೆ ಮುಳುವಾಗಿದ್ದು, ಎಫ್ ಐಆರ್ ದಾಖಲಿಸಲು ಆದೇಶಿಸಲಾಗಿದೆ. ಅಲ್ಲದೇ ತುಮಕೂರಿನ ಪೊಲೀಸರಿಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಲಾಗಿದೆ.
ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬೆಟ್ಟಿಂಗ್ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದ್ದರು. ಇದೇ ವಿಚಾಅರ ಇದೀಗ ಸಚಿವರಿಗೆ ಸಂಕಷ್ಟ ತಂದೊಡ್ಡಿದೆ.


