*ದೈವದ ಭಂಡಾರ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಕಾಲುಸಂಕ ಕುಸಿದು ಬಿದ್ದು ಅವಘಡ: 8 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಕಾಲು ಸಂಕ ಮುರಿದು ಬಿದ್ದು ಎಂಟು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ಈ ಅವಘಡ ಸಂಭವಿಸಿದೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗ ಏಕಾಏಕಿ ಕಾಲು ಸಂಕ ಕುಸಿದಿದ್ದು, ದೈವದ ಬಂಡಾರದ ಸಮೇತ 8 ಜನರು ಕೆಳಗೆ ಬಿದ್ದಿದ್ದಾರೆ.
ದುರ್ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ, ಅವರಲ್ಲಿ ಓರ್ವನ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು ಸೇತುವೆಯನ್ನು ಪಲ್ಲಕ್ಕಿ ಹೊತ್ತವರು ದಾಟುತ್ತಿದ್ದಾಗ, ಜನದಟ್ಟಣೆಯ ಭಾರಕ್ಕೆ ಸಂಕ ಏಕಾಏಕಿ ಕುಸಿದು ಬಿದ್ದಿದೆ.
ಸಂಕ ಮುರಿದು ಬಿದ್ದ ರಭಸಕ್ಕೆ ಪಲ್ಲಕ್ಕಿ ಉರುಳಿದ್ದು, ಸಂಕದ ಮೇಲ್ಭಾಗದ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆಯೇ ಬಿದ್ದಿದೆ. ಪರಿಣಾಮ ಮಾರೂರಿನ ಸುನಿಲ್ ಶೆಟ್ಟಿ ಮುಕಾಲ್ದಿ, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತಿದ್ದ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಲಕ್ಕಿ ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಪವಿತ್ರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.


